ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಬೆಂಗಳೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಗೆ ತಜ್ಞ ವೈದ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡುವ ಸಂಬಂಧ ಕ್ರಮ ತೆಗೆದುಕೊಳ್ಳಿ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗೆ ಪತ್ರ ಬರೆದು, ಮೈಸೂರಿನ ಜಯದೇವ ಆಸ್ಪತ್ರೆಗೆ ತಜ್ಞ ವೈದ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡುವಂತೆ ಕೋರಿದ್ದರು.
‘ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಆತಂಕಗೊಂಡ ಜನರು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಈ ಹಿಂದೆ ಪ್ರತಿದಿನ ಸರಾಸರಿ 700 ಜನರು ತಪಾಸಣೆಗೆ ಬರುತ್ತಿದ್ದರು. ಈಗ ಈ ಸಂಖ್ಯೆ 1,500 ದಾಟಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
‘ಆಸ್ಪತ್ರೆಗೆ ಬರುತ್ತಿರುವ ಜನರ ಸಂಖ್ಯೆ ದುಪ್ಪಟ್ಟಾದ ಕಾರಣ, ಈಗ ಇರುವ ಸಿಬ್ಬಂದಿಯಿಂದ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ತಜ್ಞ ವೈದ್ಯರನ್ನು ನಿಯೋಜನೆ ಮಾಡಬೇಕು. ಜತೆಗೆ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲೂ ಹೃದ್ರೋಗ ಸಂಬಂಧಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಮೂಲಸೌಕರ್ಯವನ್ನು ಒದಗಿಸಬೇಕು’ ಎಂದು ಕೋರಿದ್ದರು.
ಮುಖ್ಯಮಂತ್ರಿಯ ಕಚೇರಿಯು, ಈ ಮನವಿ ಪತ್ರವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ರವಾನಿಸಿದೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಇದನ್ನು ಕೂಲಂಕಷವಾಗಿ ಪರಿಶೀಲಿಸಿ. ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಿ’ ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.