ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ರಾಜ್ಯ ವಿಧಾನಸಭೆಗೆ 2023ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ಮಾರ್ಚ್ 2ರಿಂದ ಕಲಾಪದ ಎಲ್ಲ ದಿನಗಳಲ್ಲಿ ನಿತ್ಯ ವಿಚಾರಣೆ ನಡೆಸಲಿದೆ.
‘ಸಿ.ಕೆ.ರಾಮಮೂರ್ತಿ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಿಸಿ ಚುನಾವಣಾ ಆಯೋಗ ಪ್ರಕಟಿಸಿರುವ ಫಲಿತಾಂಶವನ್ನು ರದ್ದುಪಡಿಸಬೇಕು ಮತ್ತು 827 ಅಂಚೆ ಮತಗಳನ್ನು ಮರು ಎಣಿಕೆ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಮುಂದುವರಿಸಿತು.
ವಿಚಾರಣೆ ವೇಳೆ ವಿಚಾರಣೆ ವೇಳೆ ಸಿ.ಕೆ.ರಾಮಮೂರ್ತಿ ಪರ ವಕೀಲರು ಕೆಲವು ಕಡತಗಳನ್ನು ಸಲ್ಲಿಸಲು ಮತ್ತಷ್ಟು ಕಾಲಾವಕಾಶ ಕೋರಿದರು. ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ, ‘ಚುನಾವಣಾ ತಕರಾರು ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸುಪ್ರೀಂ ಕೋರ್ಟ್ ನಿರ್ದೇಶನವಿದೆ. ಹೀಗಾಗಿ, ಈ ಅರ್ಜಿಯನ್ನು ಮಾರ್ಚ್ 2 ರಿಂದ ಪ್ರತಿದಿನ ವಿಚಾರಣೆ ನಡೆಸಿ, ಒಂದು ತಿಂಗಳಲ್ಲಿ ವಿಲೇವಾರಿ ಮಾಡಲಾಗುವುದು’ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.