ADVERTISEMENT

ಜೆಡಿಎಸ್‌ ಬೆಳ್ಳಿಹಬ್ಬ|ನ. 21,22ರಂದು ರಾಷ್ಟ್ರೀಯ ಸಮಾವೇಶ: ನಿಖಿಲ್‌ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 15:38 IST
Last Updated 20 ನವೆಂಬರ್ 2025, 15:38 IST
ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ   

ಬೆಂಗಳೂರು: ‘ಜೆಡಿಎಸ್ ಸ್ಥಾಪನೆಯಾಗಿ 25 ವರ್ಷ ಪೂರೈಸಿದ್ದು, ಅದರ ನಿಮಿತ್ತ ಇದೇ 21 ಮತ್ತು 22ರಂದು ರಾಷ್ಟ್ರೀಯ ಸಮಾವೇಶ ನಡೆಯಲಿದೆ’ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸಮಾವೇಶ ನಡೆಯಲಿದೆ. ಪಕ್ಷ ಸ್ಥಾಪನೆ, ಪಕ್ಷ ನಡೆದು ಬಂದ ಹಾದಿ, ಹೋರಾಟಗಳು, ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತಾದ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗುತ್ತದೆ’ ಎಂದು ತಿಳಿಸಿದರು.

‘ಪಕ್ಷದ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ವಿವಿಧ ರಾಜ್ಯಗಳ ರಾಜ್ಯ ಘಟಕದ ಅಧ್ಯಕ್ಷರು, ಶಾಸಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ’ ಎಂದರು.

ADVERTISEMENT

ರಾಷ್ಟ್ರೀಯ ಪರಿಷತ್ ಸಭೆ: ‘ಶುಕ್ರವಾರ ಸಂಜೆ ‍ಪಕ್ಷದ ರಾಷ್ಟ್ರೀಯ ಪರಿಷತ್ ಮತ್ತು ರಾಜ್ಯ ಪರಿಷತ್‌ನ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ’ ಎಂದು ನಿಖಿಲ್‌ ಮಾಹಿತಿ ನೀಡಿದರು.

ನೂತನ ಅಧ್ಯಕ್ಷ ಆಯ್ಕೆ?
ಜೆಡಿಎಸ್‌ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ಪಕ್ಷವು ಶನಿವಾರ ಘೋಷಿಸುವ ಸಾಧ್ಯತೆ ಇದೆ. ಅಧ್ಯಕ್ಷ ಬದಲಾಗುತ್ತಾರೆ ಎಂಬುದರ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಸಮಾವೇಶದ ಭಾಗವಾಗಿ ನಡೆಯಲಿರುವ ರಾಷ್ಟ್ರೀಯ ಪರಿಷತ್‌ ಮತ್ತು ರಾಜ್ಯ ಪರಿಷತ್‌ ಸಭೆಗಳಲ್ಲಿ ಈ ವಿಚಾರವನ್ನು ಚರ್ಚಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ. ನಿಖಿಲ್‌ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಪಕ್ಷದ ಹಲವು ನಾಯಕರು ಒತ್ತಾಯಿಸಿದ್ದಾರೆ. ಸಭೆಗಳಲ್ಲಿ ಈ ವಿಚಾರವನ್ನೂ ಚರ್ಚಿಸಲಾಗುತ್ತದೆ. ಸಭೆಯಲ್ಲೇ ಹೆಸರನ್ನು ಅಂತಿಮಗೊಳಿಸಿ ಶನಿವಾರದ ಕಾರ್ಯಕ್ರಮದಲ್ಲಿ ಘೋಷಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.