
ಹಾಸನ: ‘ಕೆಟ್ಟ ಆಡಳಿತದ ರಾಜ್ಯ ಸರ್ಕಾರವನ್ನು ಕಿತ್ತೆಸೆಯಬೇಕು ಎಂಬುದು ಜನರ ಬಯಕೆ. ಅದಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷಗಳ ನಾಯಕರು ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬುಧವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಗೊಂದಲ ಆಗಬಾರದು ಎಂದು ಸ್ಥಳೀಯ ಸಂಸ್ಥೆಗಳ ಚುನಾವಣೆ
ಯಲ್ಲಿ ಮೈತ್ರಿ ಬಗ್ಗೆ ಎಚ್.ಡಿ.ದೇವೇಗೌಡರು ಮಾತನಾಡಿದ್ದಾರೆ’ ಎಂದರು.
‘ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸಾಧ್ಯವಾದ ಮಟ್ಟಿಗೆ ಮೈತ್ರಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಉಭಯ ಪಕ್ಷಗಳ ನಾಯಕರು ಕುಳಿತು ಚರ್ಚಿಸುತ್ತೇವೆ’ ಎಂದರು.
‘ಪೌರಾಯುಕ್ತೆಗೆ ಅವಾಚ್ಯವಾಗಿ ನಿಂದನೆ, ಅಬಕಾರಿ ಅಧಿಕಾರಿಗಳ ಬಳಿ ನಗದು ವಶ, ಮಹಿಳೆ ಜೊತೆ ಐಪಿಎಸ್ ಅಧಿಕಾರಿಯ ಅಸಭ್ಯ ವರ್ತನೆ ಸೇರಿದಂತೆ ಅಧಿಕಾರಿಗಳ ನಡವಳಿಕೆ, ಭ್ರಷ್ಟಾಚಾರದ ಕುರಿತು ಚರ್ಚಿಸಲು ಆಗದಂತಹ ಅಸಹ್ಯಕರ ವಾತಾವರಣವನ್ನು ರಾಜ್ಯದಲ್ಲಿ ನಿರ್ಮಿಸಿದ್ದಾರೆ. ಯಾವುದೇ ಹಿಟ್ ಆಂಡ್ ರನ್ ಇಲ್ಲ. ನಿಮ್ಮ ಕರ್ಮಕಾಂಡ ಹೇಳಲು ನನ್ನ ಬಳಿ ಸಾಕಷ್ಟು ದಾಖಲೆಗಳಿವೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
‘ಜಿಲ್ಲೆಯಲ್ಲಿ ಎರಡು ಸಮಾವೇಶ ನಡೆಸುವ ಮೂಲಕ ಜೆಡಿಎಸ್ ನಿರ್ನಾಮಕ್ಕೆ ಕಾಂಗ್ರೆಸ್ಸಿಗರು ಹೊರಟಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಮಾವೇಶ ಆಯೋಜಿಸುವ ಮೂಲಕ ಜನರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಸಂದೇಶ ನೀಡಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.