ADVERTISEMENT

‘ಮೈತ್ರಿ’ ಶಕ್ತಿ ಪ್ರದರ್ಶನ ಇಂದು

‘ಪರಿವರ್ತನಾ ಸಮಾವೇಶ’ಕ್ಕೆ ರಾಹುಲ್‌, ದೇವೇಗೌಡ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2019, 19:30 IST
Last Updated 30 ಮಾರ್ಚ್ 2019, 19:30 IST
   

ಬೆಂಗಳೂರು: ಚುನಾವಣಾ ಜಂಟಿ ಪ್ರಚಾರಕ್ಕೆ ‘ದೋಸ್ತಿ’ಗಳು (ಜೆಡಿಎಸ್‌– ಕಾಂಗ್ರೆಸ್‌) ಅಧಿಕೃತವಾಗಿ ಭಾನುವಾರ (ಮಾ. 31) ಚಾಲನೆ ನೀಡಲಿದ್ದು, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‍ ಗಾಂಧಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ‘ಪರಿವರ್ತನಾ ಸಮಾವೇಶ’ ಉದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನದ ಆವರಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಈ ಸಮಾವೇಶದಲ್ಲಿ 4 ಲಕ್ಷದಿಂದ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯನ್ನು ಉಭಯ ಪಕ್ಷಗಳ ನಾಯಕರು ವ್ಯಕ್ತಪಡಿಸಿದ್ದಾರೆ. ಆ ಮೂಲಕ, ಶಕ್ತಿ ಪ್ರದರ್ಶನಕ್ಕೂ ಮುಂದಾಗಿದ್ದಾರೆ.

ಇತ್ತೀಚೆಗೆ ನಡೆದ ಜೆಡಿಎಸ್‌, ಕಾಂಗ್ರೆಸ್‌ ನಾಯಕರ ಜಂಟಿ ಸಭೆಯಲ್ಲಿ ಒಟ್ಟಿಗೆ ಪ್ರಚಾರ ಸಮಾವೇಶ ನಡೆಸುವ ಕುರಿತು ನಿರ್ಧರಿಸಲಾಗಿತ್ತು. ಹೆಚ್ಚು ಜನರನ್ನು ಸೇರಿಸುವ ಮೂಲಕ ತಮ್ಮ ಬಲ ಪ್ರದರ್ಶನಕ್ಕೆ ಎರಡೂ ಪಕ್ಷಗಳ ಪ್ರಮುಖರು ತೀರ್ಮಾನಿಸಿದ್ದರು.

ADVERTISEMENT

‘ಈ ಸಮಾವೇಶದ ಮೂಲಕ ಮತ್ತೆ ಇಡೀ ದೇಶಕ್ಕೆ ಹೊಸ ಸಂದೇಶ ರವಾನಿಸುತ್ತೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬುವುದೇ ನಮ್ಮ ಉದ್ದೇಶ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

‘ಸಮಾವೇಶದಲ್ಲಿ ಎಚ್‌.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಎರಡೂ ಪಕ್ಷಗಳ ಪ್ರಮುಖ ನಾಯಕರು ಮತ್ತು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಹಾಘಟಬಂಧನಕ್ಕೆ ಸಂಬಂಧಿಸಿದಂತೆ ಬೇರೆ ಯಾವುದೇ ಪಕ್ಷದವರು ಇರುವುದಿಲ್ಲ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.