ADVERTISEMENT

ಸೆ.26 ರಿಂದ ಜೆಡಿಎಸ್‌ ಪ್ರಮುಖರ ಸಮಿತಿ ಪ್ರವಾಸ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2023, 15:51 IST
Last Updated 17 ಸೆಪ್ಟೆಂಬರ್ 2023, 15:51 IST
   

ಬೆಂಗಳೂರು: ಪಕ್ಷ ಸಂಘಟನೆ, ಲೋಕಸಭಾ ಚುನಾವಣೆ ತಯಾರಿ ಮತ್ತಿತರ ವಿಷಯಗಳ ಕುರಿತು ಸ್ಥಳೀಯವಾಗಿ ಅಭಿಪ್ರಾಯ ಸಂಗ್ರಹಿಸಲು ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ಜೆಡಿಎಸ್‌ ರಾಜ್ಯ ಪ್ರಮುಖರ ಸಮಿತಿ (ಕೋರ್‌ ಕಮಿಟಿ) ಸದಸ್ಯರು ಇದೇ 26 ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.

ಸೆಪ್ಟೆಂಬರ್‌ 26 ರಂದು ಕಲಬುರಗಿ ನಗರದಲ್ಲಿ ಕಲಬುರಗಿ ವಿಭಾಗದ ಸಭೆ ನಡೆಯಲಿದೆ. ಸೆ. 27ರಂದು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಬಳ್ಳಾರಿ ವಿಭಾಗದ ಸಭೆ ನಡೆಯಲಿದೆ. ನಂತರ ಉಳಿದ ವಿಭಾಗಗಳ ಸಭೆಗಳ ದಿನಾಂಕಗಳನ್ನು ನಿಗದಿ ಮಾಡಲಾಗುವುದು ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಪ್ರಮುಖರ ಸಮಿತಿ ಸಭೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಮಿತಿಯ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಪಕ್ಷದ ಜಿಲ್ಲಾ ಮಟ್ಟದ ನಾಯಕರಿಗೆ ಪತ್ರ ಬರೆದಿದ್ದಾರೆ. ಪ್ರಮುಖರ ಸಮಿತಿ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತವರು, ಜಿಲ್ಲೆ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

ADVERTISEMENT

ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷದ ಪದಾಧಿಕಾರಿಗಳ ನೇಮಕ, ಪಕ್ಷದ ಸಂಘಟನೆಯಲ್ಲಿ ಬದಲಾವಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಮುಖರ ಸಮಿತಿಯು ಅಭಿಪ್ರಾಯ ಸಂಗ್ರಹಿಸಲಿದೆ. ಅದನ್ನು ಪಕ್ಷದ ವರಿಷ್ಠರ ಮುಂದಿಟ್ಟು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್‌ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.