ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷರಾದ ಕೂಡಲೇ ಸಮಾಜದ (ಒಕ್ಕಲಿಗ) ಮುಖಂಡರನ್ನು ಸೆಳೆಯುವ ಯತ್ನ ಮಾಡಿರುವವರಿಗೆ ಹಿಂದೆ ಯಾಕೆ ಸಮಾಜ ನೆನಪಾಗಲಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಹೆಸರು ಹೇಳದೇ ಪ್ರಶ್ನಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಹಿಂದೆ ಅವರು ಯಾರಿಗೆ ರಕ್ಷಣೆ ಕೊಟ್ಟಿದ್ದಾರೆ. ಸಮಾಜದವರ ಕಷ್ಟಸುಖದಲ್ಲಿ ಭಾಗಿಯಾಗಿದ್ದರೆ ಎಂಬುದನ್ನು ಹೇಳಲಿ. ಈಗ ಅವರು ಕರೆದ ಕೂಡಲೇ ಕಿಂದರಜೋಗಿಯ ಹಿಂದೆ ಹೋದಂತೆ ಹೋಗಲು ಅವರು ಕೊಟ್ಟ ಕಾಣಿಕೆ ಏನು?’ ಎಂದು ಕುಟುಕಿದರು.
‘ನಮ್ಮ ಪಕ್ಷದ ನಾಯಕರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು, ಜೆಡಿಎಸ್ ಮುಗಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ಏಳು ಶಾಸಕರನ್ನು ನಮ್ಮ ಪಕ್ಷದಿಂದ ಸೆಳೆದಿದ್ದರು. ಕಾಂಗ್ರೆಸ್ ನಾಯಕರಿಂದ ಹೊಸ ನಾಟಕ ಶುರುವಾಗಿದ್ದು, ಇದರಿಂದ ಕೂಡ ಜನರ ಹೃದಯವನ್ನು ಗೆಲ್ಲಲಾಗದು’ ಎಂದರು.
‘ಕಾಂಗ್ರೆಸ್ ಅಭ್ಯರ್ಥಿ ಮೇಲೆ ಎಫ್ಐಆರ್ ದಾಖಲಿಸಿರುವ ಬಗ್ಗೆ ರಾಜಕಾರಣ ಬೆರೆಸುವುದು ಅನಗತ್ಯ. ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ಮೂರು ಮಂದಿ ಮಾತ್ರ ಹೋಗಿದ್ದೆವು. ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ, ಮಾಜಿ ಸದಸ್ಯ ಟಿ.ಎ.ಶರವಣ ಇದ್ದರೂ ಬರುವುದು ಬೇಡ ಎಂದು ಹೇಳಿದ್ದೆ. ಕಾಂಗ್ರೆಸ್ನವರು ದಂಡುಕಟ್ಟಿಕೊಂಡು ಬಂದಿದ್ದನ್ನು ನಾನು ನೋಡಿದ್ದೇನೆ. ಈಗ ಎಫ್ಐಆರ್ ಹಾಕಿಸಿ ಕಾರ್ಯಕರ್ತರನ್ನು ಹೆದರಿಸುತ್ತಾರೆ ಎಂಬ ಆರೋಪ ಮಾಡಿರುವುದು ಎಷ್ಟು ಸರಿ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
‘ಈಗ ಟೀಕೆ ಮಾಡುವವರು ಕನಕಪುರದಲ್ಲಿ ಯಾವ ಯಾವ ರೀತಿ ಚುನಾವಣೆ ನಡೆಸಿದ್ದಾರೆ, ಎಷ್ಟರಮಟ್ಟಿಗೆ ಪರಿಶುದ್ಧ ಮತ್ತು ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.