ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಆಗ್ರಹಿಸಿ ಜೆಡಿಎಸ್ ಗುರುವಾರ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನಕ್ಕೆ ಕಾಲ್ನಡಿಗೆ ಜಾಥಾ ಮೂಲಕ ತೆರಳಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಕೇಂದ್ರದ ಅನುಮತಿ ಕೋರುತ್ತಿದೆ. ಕೃಷ್ಣಾ ಮತ್ತು ಮಹದಾಯಿಯಲ್ಲಿ ರಾಜ್ಯಕ್ಕೆ ಹೆಚ್ಚುವರಿ ನೀರು ನಿಗದಿ ಮಾಡಲಾಗಿದೆಯಾದರೂ, ಅದರ ಬಳಕೆಗೆ ಸಂಬಂಧಿಸಿದ ಯೋಜನೆಗಳಿಗೆ ಕೇಂದ್ರ ಅನುಮತಿ ನೀಡುತ್ತಿಲ್ಲ. ಈ ಮೂರು ಯೋಜನೆಗಳಿಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ಜೆಡಿಎಸ್ ಮನವಿ ಮಾಡಿದೆ,‘ ಎಂದು ತಿಳಿಸಿದರು.
‘ಕೇಂದ್ರ ಸಕಾರಾತ್ಮಕಾಗಿ ಸ್ಪಂದಿಸದೇ ಇದ್ದರೆ ದೇವೇಗೌಡರ ನೇತೃತ್ವದಲ್ಲಿ ದೆಹಲಿಗೆ ತೆರಳಿ ರಾಷ್ಟ್ರಪತಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು,‘ ಎಂದೂ ಅವರು ಇದೇ ವೇಳೆ ಹೇಳಿದರು.
ನಂತರ ಈ ಬಗ್ಗೆ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ‘ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಮನವಿ ಪತ್ರವನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳಿಗೆ ರವಾನಿಸಲಾಗಿದೆ. ಈ ಹೋರಾಟ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರವಾಗಲಿದೆ. ಕನ್ನಡ ನಾಡಿನ ನುಡಿ, ನೆಲ, ಜಲ, ಗಡಿ ರಕ್ಷಣೆ ಜೆಡಿಎಸ್ನ ಆದ್ಯತೆ. ಅದೇ ನಮ್ಮ ಬದ್ಧತೆ,‘ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.