ADVERTISEMENT

ಬಿಎಸ್‌ವೈ–ಎಚ್‌ಡಿಕೆ ಅರ್ಧ ತಾಸು ಚರ್ಚೆ: ರಾಜಕೀಯ ವಲಯದಲ್ಲಿ ಸಂಚಲನ

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಾಯಕರ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 17:57 IST
Last Updated 11 ಸೆಪ್ಟೆಂಬರ್ 2020, 17:57 IST
   

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಶುಕ್ರವಾರ ಬೆಳಿಗ್ಗೆ ಮುಖ್ಯ
ಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮೈತ್ರಿ ಸರ್ಕಾರದ ಪತನದ ಒಂದು ವರ್ಷದ ಬಳಿಕ ಇದೇ ಮೊದಲ ಬಾರಿಗೆ ಈ ಇಬ್ಬರು ನಾಯಕರು ಚರ್ಚಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ಬಗೆಯ ಊಹಾಪೋಹ, ಲೆಕ್ಕಾಚಾರಗಳಿಗೂ ದಾರಿ ಮಾಡಿಕೊಟ್ಟಿದೆ.

ಸಭೆಯ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಇಬ್ಬರು ನಾಯಕರು ‘ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ’ ಎಂದಷ್ಟೇ ಹೇಳಿದ್ದಾರೆ.

ADVERTISEMENT

‘ಯಡಿಯೂರಪ್ಪನವರಿಗೆ ವಯಸ್ಸಾಗಿದ್ದು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಅವರ ಆಕಾಂಕ್ಷೆಯಾಗಿಲ್ಲ.ಈಗ ಬಹುಪಾಲು ಅಧಿಕಾರವನ್ನು ಅವರ ಮಕ್ಕಳೇ ನಡೆಸುತ್ತಿದ್ದಾರೆ. ಅವರೇ ಅಧಿಕಾರದಲ್ಲಿ ಮುಂದುವರಿದರೆ ಪಕ್ಷಕ್ಕೆ ಉಳಿಗಾಲವಿಲ್ಲ. ಪಕ್ಷದ ಹಿತಕ್ಕಾಗಿ ಮುಖ್ಯಮಂತ್ರಿ ಬದಲಾವಣೆಯಾಗ
ಬೇಕು’ ಎಂಬ ವಾದವನ್ನು ಬಿಜೆಪಿಯಒಂದು ಗುಂಪು ಬಲವಾಗಿ ಮಂಡಿಸುತ್ತಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್‌, ಸಿ.ಟಿ. ರವಿ ಮತ್ತಿತರರು ದೆಹಲಿಗೆ ಭೇಟಿ ನೀಡಿ ವರಿಷ್ಠರನ್ನು ಭೇಟಿ ಮಾಡಿ ಬರುತ್ತಿರುವುದು ಇದರ ಭಾಗವಾಗಿಯೇ ಎಂಬ ಚರ್ಚೆಯೂ ಪಕ್ಷದಲ್ಲಿ ನಡೆದಿದೆ.

‘ಹಾಗೊಂದು ವೇಳೆ ಯಡಿಯೂರಪ್ಪ ಅವರಿಗೆ ಪಕ್ಷ ಕೈಕೊಟ್ಟರೆ ಆಗ ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲಲಿದ್ದಾರೆ. ಅಂತಹ ಕಸರತ್ತಿಗೆ ಕೈಹಾಕಬೇಡಿ’ ಎಂಬ ಸಂದೇಶವನ್ನು ರವಾನಿಸುವುದು ಈ ನಾಯಕರ ಭೇಟಿಯ ಹಿಂದಿನ ಉದ್ದೇಶ ಎಂದೂ ಹೇಳಲಾಗುತ್ತಿದೆ.

‘ರಾಜಕೀಯದ ಚರ್ಚೆ ನಡೆದಿಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಆದ ನಷ್ಟದ ಪರಿಹಾರಕ್ಕೆ ಕೋರಲು ಬಂದಿದ್ದರು’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ನಾಯಕರ ಮಧ್ಯೆ ರಹಸ್ಯ ಮಾತುಕತೆ

ದಾಸರಹಳ್ಳಿ ಸೇರಿದಂತೆ ಜೆಡಿಎಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆದರೆ, ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಅವರನ್ನು ಮುಂದಿಟ್ಟುಕೊಂಡು ಅನುದಾನದ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಬಳಿಕ, ಮಂಜುನಾಥ್ ಅವರನ್ನು ಕೊಠಡಿಯಿಂದ ಹೊರಗೆ ಕಳುಹಿಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರೇ ರಹಸ್ಯ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.

ದಾಸರಹಳ್ಳಿ ಸೇರಿದಂತೆ ಜೆಡಿಎಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆದರೆ, ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಅವರನ್ನು ಮುಂದಿಟ್ಟುಕೊಂಡು ಅನುದಾನದ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಬಳಿಕ, ಮಂಜುನಾಥ್ ಅವರನ್ನು ಕೊಠಡಿಯಿಂದ ಹೊರಗೆ ಕಳುಹಿಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರೇ ರಹಸ್ಯ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.