ಬೆಂಗಳೂರು: ನಿಗಮ ಮಂಡಳಿ ಗೊಂದಲ ವಿಷಯಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮಂಗಳವಾರ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ.
ಗೊಂದಲ ಪರಿಹರಿಸುವಂತೆ ವೇಣುಗೋಪಾಲ್ ಸೂಚಿಸಿದಾಗ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನವನ್ನು ತಾಂತ್ರಿಕ ಕಾರಣಕ್ಕೆ ಹಂಚಿಕೆ ಮಾಡದಿರುವ ಬಗ್ಗೆ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ. ಸುಧಾಕರ್ ಅವರನ್ನು ನೇಮಿಸಿದ ಬಳಿಕ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ.
‘ಬಿಡಿಎಗೆ ನೇಮಕ ಆದೇಶ ಹೊರಡಿಸುವ ವಿಷಯದಲ್ಲಿ ನನ್ನ ಅಭ್ಯಂತರವೇನೂ ಇಲ್ಲ. ಆದರೆ, ಜೆಡಿಎಸ್ ಸಚಿವರ ಖಾತೆಗಳಿಗೆ ಕಾಂಗ್ರೆಸ್ ಶಾಸಕರನ್ನು ನೇಮಿಸಿದರೆ ಹೇಗೆ’ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಸಮನ್ವಯ ಸಮಿತಿ ಸಭೆಯಲ್ಲೇ ನಿಗಮ ಮಂಡಳಿಗಳ ಹಂಚಿಕೆ ಬಗ್ಗೆ ಮಾತುಕತೆ ನಡೆದಿದೆ. ಹೀಗಾಗಿ., ಪಕ್ಷ ಸೂಚಿಸಿದ ಹೆಸರುಗಳನ್ನು ನಿಗಮ ಮಂಡಳಿಗಳಿಗೆ ನೇಮಿಸುವುದುವುದು ಸೂಕ್ತ ಎಂದು ವೇಣುಗೋಪಾಲ್ ಆಗ್ರಹಿಸಿದಾಗ, ಈ ವಿಷಯದಲ್ಲಿ ‘ದೊಡ್ಡವರು’ (ದೇವೇಗೌಡ) ಮಾತನಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
‘ನಿಮ್ಮ ಜೊತೆ ಮಾತನಾಡಲು ಬುಧವಾರ ದಿನೇಶ್ ಮತ್ತು ಪರಮೇಶ್ವರ ಬರುತ್ತಾರೆ. ಮಾತುಕತೆ ಮೂಲಕ ಗೊಂದಲ ಬಗೆಹರಿಸಿ’ ಎಂದು ವೇಣುಗೋಪಾಲ್ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.