ADVERTISEMENT

ಇಬ್ಬರು ಶಾಸಕರ ಅನರ್ಹತೆ: ಸ್ಪೀಕರ್‌ಗೆ ಜೆಡಿಎಸ್‌ ಅರ್ಜಿ

ಕೆ. ಶ್ರೀನಿವಾಸ ಗೌಡ, ಎಸ್‌.ಆರ್‌. ಶ್ರೀನಿವಾಸ್‌ ವಿರುದ್ಧ ಅಡ್ಡ ಮತದಾನದ ಆರೋಪ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:31 IST
Last Updated 8 ಜುಲೈ 2022, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 10ರಂದು ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ತಮ್ಮ ಪಕ್ಷದ ಕೆ. ಶ್ರೀನಿವಾಸ ಗೌಡ ಮತ್ತು ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜೆಡಿಎಸ್‌ ಶುಕ್ರವಾರ ಅರ್ಜಿ ಸಲ್ಲಿಸಿದೆ.

ವಿಧಾನಸಭೆಯಲ್ಲಿ ಜೆಡಿಎಸ್‌ ಸಚೇತಕರಾಗಿರುವ ವೆಂಕಟರಾವ್‌ ನಾಡಗೌಡ ಅವರು ವಿಧಾನಸಭೆಯ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಿದರು. ಇಬ್ಬರು ಶಾಸಕರು ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದು, ರಾಜ್ಯಸಭೆ ಚುನಾವಣೆಯಲ್ಲಿ ಅನ್ಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದಕ್ಕೆ ಸಂಬಂಧಿಸಿದ ದಾಖಲೆ ಗಳನ್ನು ದೂರಿನೊಂದಿಗೆ ಲಗತ್ತಿಸಿದ್ದು, ಇಬ್ಬರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.

ಬಳಿಕ ಮಾತನಾಡಿದ ವೆಂಕಟರಾವ್‌ ನಾಡಗೌಡ, ‘ಇಬ್ಬರು ಶಾಸಕರೂ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಶ್ರೀನಿವಾಸ ಗೌಡ ಅವರು ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ’ ಎಂದರು.

ADVERTISEMENT

‘ಇಂತಹ ದೂರುಗಳಿಂದ ಪ್ರಯೋ ಜನ ಆಗುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿರುವುದು ನಿಜ. ಆದರೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಸಂದೇಶ ರವಾನೆ ಆಗಬಾರದು. ಈ ಉದ್ದೇಶದಿಂದ ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.