ADVERTISEMENT

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ: ಬೀದಿಗಿಳಿದ ಜೆಡಿಎಸ್‌ ನಾಯಕರು

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 21:24 IST
Last Updated 14 ಆಗಸ್ಟ್ 2020, 21:24 IST
ಸುರಿಯುವ ಮಳೆಯಲ್ಲಿಯೇ, ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಚ್.ಡಿ.ದೇವೇಗೌಡ ಅವರಿಗೆ ಕೊಡೆ ಹಿಡಿದ ಅಂಗರಕ್ಷಕರು
ಸುರಿಯುವ ಮಳೆಯಲ್ಲಿಯೇ, ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಚ್.ಡಿ.ದೇವೇಗೌಡ ಅವರಿಗೆ ಕೊಡೆ ಹಿಡಿದ ಅಂಗರಕ್ಷಕರು   

ಹಾಸನ:‌ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಸಿ ವಿರೋಧಿಸಿ ಜೆಡಿಎಸ್‌ ಹಮ್ಮಿಕೊಂಡಿರುವ ಹೋರಾಟಕ್ಕೆ ಶುಕ್ರವಾರ ಹಾಸನದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ನೇತೃತ್ವದಲ್ಲಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆ
ಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಶಾಂತಿಯುತ ಮೆರವಣಿಗೆ ನಡೆಸಿದರು.

ಈ ವೇಳೆ ಮಾತನಾಡಿದ ದೇವೇಗೌಡ, ‘ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಹಾಸನದಿಂದ ಆರಂಭವಾಗಿದೆ. ಇನ್ನು ಮುಂದೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಕೊರೊನಾ ಸೋಂಕು ಹರಡುತ್ತಿರುವುದರಿಂದ ಹೊರಗೆ ಓಡಾಡಬೇಡಿ ಎಂದು ಸಲಹೆ ನೀಡುತ್ತಾರೆ. ಸಾವು ಯಾವಾಗ ಬರುತ್ತೋ ಯಾರಿಗೆ ಗೊತ್ತು?ರೈತರ ಭೂಮಿ ಲೂಟಿ ಹೊಡೆಯಲು ಅವಕಾಶ ನೀಡುವುದಿಲ್ಲ. ಅವರ ಸಂಕಷ್ಟಕ್ಕೆ ಸ್ಪಂದಿಸುವುದಕ್ಕಾಗಿ ವಿಧಾನಸೌಧದ ಎದುರೇ ಹೋರಾಟ ಮಾಡುತ್ತೇನೆ. ಬೇಕಾದರೆ ಬಂಧಿಸಲಿ’ ಎಂದು ಗುಡುಗಿದರು.

ADVERTISEMENT

ಸುರಿಯುತ್ತಿದ್ದ ಮಳೆಯಲ್ಲಿಯೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಟಿ.ರಾಮಸ್ವಾಮಿ, ಕೆ.ಎಸ್.ಲಿಂಗೇಶ್‌, ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ಸಂಸದ ಪ್ರಜ್ವಲ್‌ ರೇವಣ್ಣ ಭಾಷಣ ಮಾಡಿದರು.

ರೈತ, ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ, ಎಚ್‌.ಡಿ.ದೇವೇಗೌಡ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.