ಬೆಂಗಳೂರು: ಆಡಳಿತ ಪಕ್ಷದ ಅಸಮರ್ಥತೆ ಮತ್ತು ಪ್ರಮುಖ ವಿರೋಧ ಪಕ್ಷದ ಪ್ರತಿಷ್ಠೆಯಿಂದ ವಿಧಾನಮಂಡಲ ಕಲಾಪ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸೋಮವಾರ ಧರಣಿ ನಡೆಸಿದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಮತ್ತು ಪ್ರಮುಖರ ಸಮಿತಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ ನೇತೃತ್ವದಲ್ಲಿ ಧರಣಿ ನಡೆಸಿದ ಶಾಸಕರು, ವಿಧಾನಮಂಡಲ ಕಲಾಪವನ್ನು ಸರಿಯಾದ ರೀತಿಯಲ್ಲಿ ನಡೆಸುವಂತೆ ಆಗ್ರಹಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದರು.
‘ಚರ್ಚೆ ಮಾಡುವುದಕ್ಕಾಗಿಯೇ ಅಧಿವೇಶನ ಕರೆಯುವುದು. ಧರಣಿ ನಡೆಸುವುದೂ ಶಾಸಕರ ಹಕ್ಕು. ಆದರೆ, ಅಹೋರಾತ್ರಿ ಧರಣಿ ನಡೆಸಿ ಜನರ ತೆರಿಗೆ ಹಣವನ್ನು ಪೋಲು ಮಾಡುವುದು ಸರಿಯಲ್ಲ’ ಎಂದು ಎಚ್.ಕೆ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
‘ಜ್ವಲಂತ ಸಮಸ್ಯೆಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆಯೇ ಆಗುತ್ತಿಲ್ಲ. ಮೇಕೇದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ನಡೆಸಿದವರ ಜವಾಬ್ದಾರಿ ಈಗ ಎಲ್ಲಿ ಹೋಯಿತು’ ಎಂದು ಬಂಡೆಪ್ಪ ಕಾಶೆಂಪೂರ ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.