ಹಾಸನ: ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮೊದಲು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಪಕ್ಷ ಅವರನ್ನು ಎರಡು ಬಾರಿ ಸಚಿವರನ್ನಾಗಿ ಮಾಡಿದೆ. ಸ್ಥಳೀಯ ನಾಯಕರ ಬಗ್ಗೆ ಅಸಮಾಧಾನವಿದ್ದರೆಹಿರಿಯರ ಜತೆ ಮಾತನಾಡಿ ಬಗೆಹರಿಸಿಕೊಳ್ಳಬೇಕಿತ್ತು. ಆದರೆ ಅವರಿಗೆ ಮಗನ ಭವಿಷ್ಯ ಮುಖ್ಯವಾಗಿದೆ. ಈಗಲೂ ಕಾಲ ಮೀರಿಲ್ಲ, ಹಿರಿಯ ನಾಯಕರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದುಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಲಹೆ ನೀಡಿದರು.
ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳವುದು ಸಣ್ಣತನ. ತಕ್ಷಣ ಸಂಬಂಧಪಟ್ಟ ಠಾಣಾ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.
ಈ ಘಟನೆಯಿಂದ ರಾಜ್ಯವೇ ತಲೆ ತಗ್ಗಿಸುವಂತಾಗಿದ್ದು, ನೈತಿಕತೆ ಇದ್ದರೆ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು. ನಿರ್ಜನ ಪ್ರದೇಶಕ್ಕೆ ರಾತ್ರಿ ಯುವತಿ ಹೋಗಬಾರದಿತ್ತು ಎಂಬ ಸಚಿವರ ಹೇಳಿಕೆ ಸರಿಯಲ್ಲ. ಹೆಣ್ಣು ಮಕ್ಕಳು ಸಂಜೆ 6 ಗಂಟೆ ನಂತರ ಮನೆಯಿಂದ ಹೊರಗೆ ಹೋಗುವಂತಿಲ್ಲ ಎಂಬ ಆದೇಶ ಹೊರಡಿಸಲಿ. ಇಲಾಖೆಯ ವೈಫಲ್ಯ ಮುಚ್ಚಿ ಹಾಕಲು ಈ ರೀತಿ ಹೇಳುವುದು ಸರಿಯಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.