ADVERTISEMENT

ವಿಜಯೇಂದ್ರ ನೇತೃತ್ವದಲ್ಲಿಯೇ ಜಿಲ್ಲಾ,ತಾಲ್ಲೂಕು ಪಂಚಾಯಿತಿ ಚುನಾವಣೆ: ರೇಣುಕಾಚಾರ್ಯ

ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2025, 12:51 IST
Last Updated 23 ಫೆಬ್ರುವರಿ 2025, 12:51 IST
ಎಂ.ಪಿ. ರೇಣುಕಾಚಾರ್ಯ
ಎಂ.ಪಿ. ರೇಣುಕಾಚಾರ್ಯ   

ದಾವಣಗೆರೆ: ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆ ಕೂಡ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

‘ರಾಷ್ಟ್ರೀಯ ನಾಯಕರಿಗೆ ವಿಜಯೇಂದ್ರ ಅವರ ಮೇಲೆ ವಿಶ್ವಾಸವಿದೆ. ಅವರ ನಾಯಕತ್ವದ ಬಗೆಗೆ ಆಕ್ಷೇಪ ಹೊಂದಿರುವ ಭಿನ್ನಮತಿಯರು ಹೈಕಮಾಂಡ್‌ ಸಂಪರ್ಕಿಸುವುದು ಒಳಿತು. ಹಾದಿ–ಬೀದಿಯಲ್ಲಿ ನಾಯಕರನ್ನು ಟೀಕೆ ಮಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒಬ್ಬ ಭ್ರಷ್ಟ ರಾಜಕಾರಣಿ. ರಾಜಕಾರಣಕ್ಕೆ ಬರುವುದಕ್ಕೂ ಮುನ್ನ ಅವರ ಆಸ್ತಿ ಎಷ್ಟಿತ್ತು ಎಂಬುದು ಗೊತ್ತಿದೆ. ಸ್ವಕ್ಷೇತ್ರ ಬಬಲೇಶ್ವರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುವ ಆಸಕ್ತಿಯನ್ನು ಅವರು ಎಂದಿಗೂ ತೋರಿಲ್ಲ. ಕಾಂಗ್ರೆಸ್‌ನ ಪ್ರಭಾವಿ ನಾಯಕರೊಂದಿಗೆ ಅವರು ಹೊಂದಾಣಿಕೆ ಮಾಡಿಕೊಂಡಿಲ್ಲವೇ’ ಎಂದು ಪ್ರಶ್ನಿಸಿದರು.

ADVERTISEMENT

‘ಮಾಜಿ ಸಚಿವ ಕುಮಾರ ಬಂಗಾರಪ್ಪ ಕಾಂಗ್ರೆಸ್‌ನಲ್ಲಿ ಅನಾಥ ಶಿಶುವಾಗಿದ್ದರು. ಚುನಾವಣೆಯಲ್ಲಿ ಸೋಲು ಕಂಡಿದ್ದ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ. ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ಕಾಂಗ್ರೆಸ್‌ ವಿರುದ್ಧ ಹೋರಾಟ ಮಾಡಿ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.