
ಬೆಂಗಳೂರು: ‘ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಹಲವು ನಿರ್ಮಾಣ ಯೋಜನೆಗಳಿಂದ ಅಲ್ಲಿರುವ ಅಗಾಧ ಪ್ರಮಾಣದ ಅರಣ್ಯ ಪ್ರದೇಶ ನಶಿಸುವುದಿಲ್ಲವೇ’ ಎಂದು ಪ್ರಶ್ನಿಸಿರುವ ಹೈಕೋರ್ಟ್, ‘ಈ ಕುರಿತಾದ ಆಕ್ಷೇಪಣೆಗೆ ಸೂಕ್ತ ವಿವರಣೆ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಪಿಎಂ-ಉಷಾ ಯೋಜನೆ (ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ), ಅಂಬೇಡ್ಕರ್ ಥೀಮ್ ಪಾರ್ಕ್, ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ಹೊಸ ಕ್ಯಾಂಪಸ್ ಸೇರಿದಂತೆ ಹಲವು ನಿರ್ಮಾಣ ಯೋಜನೆಗಳ ಜಾರಿಗಾಗಿ ಜ್ಞಾನಭಾರತಿ ಕ್ಯಾಂಪಸ್ನ ನೂರಾರು ಮರಗಳನ್ನು ಕಡಿಯುವ ಪ್ರಸ್ತಾವ ಆತಂಕಕಾರಿಯಾಗಿದೆ’ ಎಂದು ದೂರಿ ‘ಸ್ವಯಂ ಜಾಗೃತಿ ಸೇವಾ ಟ್ರಸ್ಟ್’ ಅಧ್ಯಕ್ಷ ಸಿ.ಅಜಯ್ ಕುಮಾರ್ ಹಾಗೂ ಕೋರಮಂಗಲದ ಪಾರ್ವತಿ ಶ್ರೀರಾಮ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ‘ಯೋಜನೆಗಳ ಜಾರಿಗಾಗಿ ಕ್ಯಾಂಪಸ್ ಪ್ರದೇಶದಲ್ಲಿರುವ 400ಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗಿದೆಯೇ? ಬಯೋ ಪಾರ್ಕ್, ಮೀಸಲು ಅರಣ್ಯ ಪ್ರದೇಶಕ್ಕೆ ಇದರಿಂದ ಹಾನಿ ಆಗುವುದಿಲ್ಲವೇ? ಈ ಬಗ್ಗೆ ನಿರ್ಣಯ ಕೈಗೊಂಡಿರುವ ಪ್ರಕ್ರಿಯೆಯ ಬಗ್ಗೆ ವಿವರಣೆ ನೀಡಿ’ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ತಾಕೀತು ಮಾಡಿತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಆಯುಕ್ತ, ಬೆಂಗಳೂರು ವಿ.ವಿ ಕುಲಪತಿ ಸೇರಿದಂತೆ ಒಟ್ಟು 39 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?: ‘ಜ್ಞಾನಭಾರತಿ ಕ್ಯಾಂಪಸ್ ಒಟ್ಟು 1,112 ಎಕರೆ ಪ್ರದೇಶದಲ್ಲಿ ವಿಸ್ತರಿಸಿಕೊಂಡಿದೆ. ಇದನ್ನು ನೈಸರ್ಗಿಕ ಭೂಪ್ರದೇಶ ಮತ್ತು ಜೀವವೈಧ್ಯತೆ ಸಂರಕ್ಷಣೆಯ ಶೈಕ್ಷಣಿಕ ಹಾಗೂ ಪರಿಸರ ಕ್ಯಾಂಪಸ್ ಎಂದು ಗುರುತಿಸಲಾಗಿದೆ. ಬಯೋ ಪಾರ್ಕ್ನಲ್ಲಿ ಔಷಧೀಯ, ಬಿದಿರು, ಚಿಟ್ಟೆ, ಹಣ್ಣು ಸೇರಿದಂತೆ ವಿವಿಧ 16 ಬಗೆಯ ವಲಯಗಳಿವೆ. ಇದು ನಗರದಲ್ಲಿ ಉಳಿದಿರುವ ಕೊನೆಯ ಹಸಿರು ಪ್ರದೇಶ ಎನಿಸಿದೆ. ಇದು ಅಮೂಲ್ಯ ಸಸ್ಯವರ್ಗ, ಪ್ರಾಣಿ ಸಂಕುಲ ಮತ್ತು ನೈಸರ್ಗಿಕ ಜಲಮೂಲಗಳನ್ನು ಹೊಂದಿದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
‘ವಿವಿಧ ನಿರ್ಮಾಣ ಯೋಜನೆಗಳ ಜಾರಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಅರಣ್ಯ ಪ್ರದೇಶ ನಾಶದ ಅಂಚಿಗೆ ಸಿಲುಕಲಿದೆ ಮತ್ತು ಅಲ್ಲಿನ ಜೀವಸಂಕುಲದ ವೈವಿಧ್ಯತೆಯನ್ನು ಅಪಾಯಕ್ಕೆ ನೂಕಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.