ADVERTISEMENT

ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಹಾರ ಆರೋಪ: ಜಂಟಿ ಸದನ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 7:45 IST
Last Updated 27 ಫೆಬ್ರುವರಿ 2021, 7:45 IST
   

ಬೆಂಗಳೂರು: ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮದ ತನಿಖೆಗೆ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರನ್ನು ಒಳಗೊಂಡ 20 ಮಂದಿಯ ಜಂಟಿ ಸದನ ಸಮಿತಿ ರಚಿಸಲಾಗಿದೆ.

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜಂಟಿ ಸದನ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಆರೋಪದ ಕುರಿತು ತನಿಖೆ ನಡೆಸಿ ಇದೇ ಜೂನ್ 30ರ ಒಳಗಾಗಿ ಸಮಿತಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಸಮಿತಿಯಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಎ.ಎಸ್. ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ಕೆ. ಶಿವನಗೌಡ ನಾಯಕ್, ಬಿ.ಸಿ ನಾಗೇಶ್, ಪಿ. ರಾಜೀವ್, ಹಾಲಪ್ಪ ಆಚಾರ್, ರಾಜೇಶ್ ನಾಯ್ಕ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಎ.ಟಿ. ರಾಮಸ್ವಾಮಿ, ವೆಂಕಟ್‌ರಾವ್ ನಾಡಗೌಡ, ವಿಧಾನ ಪರಿಷತ್‌ ಸದಸ್ಯರಾದ ಎಸ್‌. ರವಿ, ವಿಜಯ್ ಸಿಂಗ್, ಎಚ್‌.ಎಂ ರಮೇಶ್ ಗೌಡ, ದೇವೇಗೌಡ, ಎಸ್‌.ವಿ ಸಂಕನೂರ ಇದ್ದಾರೆ.

ADVERTISEMENT

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಹಾಗೂ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸ್ವತಃ ಶಾಸಕರೇ ಆರೋಪ ಮಾಡಿದ್ದರು. ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು, ಈ ಕುರಿತಾಗಿ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.

ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ತನಿಖೆಯ ಭರವಸೆ ನೀಡಿದ್ದರು. ಅದರಂತೆ ಇದೀಗ ಜಂಟಿ ಸದನ ಸಮಿತಿ ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.