ತುಮಕೂರು: ಸುದ್ದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ನಗರದ ಸತ್ಯಮಂಗಲ ಕೈಗಾರಿಕಾ ಪ್ರದೇಶದ ಬೇಳೂರು ಬಾಯ್ಲರ್ ಕಾರ್ಖಾನೆ ಸಿಬ್ಬಂದಿ ಮಂಗಳವಾರ ಹಲ್ಲೆ ನಡೆಸಿದ್ದಾರೆ.
ರಾಜ್ ನ್ಯೂಸ್ ವರದಿಗಾರ ಮಹೇಶ್, ಛಾಯಾಗ್ರಹಕ ದೇವರಾಜ್ ಮತ್ತು ಸಮಯ ವಾಹಿನಿ ಛಾಯಾಗ್ರಹಕ ಚಂದನ್ ಹಲ್ಲೆಗೆ ಒಳಗಾದವರು.
ಜೂ.8ರಂದು ‘ಬೇಳೂರು ಬಾಯ್ಲರ್ ಬಯೋಟೆಕ್’ ಔಷಧಿ ತಯಾರಿಕಾ ಘಟಕದ ಬಾಯ್ಲರ್ ಸ್ಫೋಟವಾಗಿ ಒಬ್ಬರು ಗಾಯಗೊಂಡಿದ್ದರು. ಈ ಅವಘಡಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಮಾಡಲು ಇವರು ತೆರಳಿದ್ದರು.
ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದರು.
ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹಾಗೂ ವಂಶಿಕೃಷ್ಣ ಅವರಿಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಕಾರ್ಖಾನೆ ಸುತ್ತಲಿನ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.