ADVERTISEMENT

ನಗರ ಸ್ಥಳೀಯ ಸಂಸ್ಥೆಯ ನೌಕರರಿಗೂ ಜ್ಯೋತಿ ಸಂಜೀವಿನಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 18:25 IST
Last Updated 16 ಜನವರಿ 2021, 18:25 IST
ನಾರಾಯಣಗೌಡ
ನಾರಾಯಣಗೌಡ   

ಬೆಂಗಳೂರು: ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆಯನ್ನು ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಪೌರಾಡಳಿತ ಸಚಿವ ಕೆ.ಸಿ. ನಾರಾಯಣ ಗೌಡ ಸೂಚಿಸಿದ್ದಾರೆ.

ಈ ಬಗ್ಗೆ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಇಲಾಖೆ ಅಧಿಕಾರಿಗಳ ಜೊತೆ ಸಚಿವರು ಶನಿವಾರ ಸಭೆ ನಡೆಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿಮೆ ಯೋಜನೆ (ಕೆಜಿಐಡಿ) ಮತ್ತು ಭವಿಷ್ಯ ನಿಧಿ (ಜಿಪಿಎಫ್) ಸೌಲಭ್ಯ ಒದಗಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿ 15 ದಿನಗಳ ಒಳಗೆ ವರದಿ ನೀಡುವಂತೆಯೂ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚಿಸಿದರು.

ADVERTISEMENT

2017ರ ಹಿಂದಿನ ಅರ್ಹತೆಗೆ ಅನುಗುಣವಾಗಿ ನೌಕರರನ್ನು ಕಾಯಂಗೊಳಿಸಬೇಕು ಅಥವಾ ‘ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ನಿಯಮ’ಕ್ಕೆ ತಿದ್ದುಪಡಿ ತಂದು ಆರ್ಥಿಕ ಇಲಾಖೆ ಅಭಿಪ್ರಾಯ ಪಡೆದು ಒಂದು ತಿಂಗಳ ಒಳಗಾಗಿ ಕರಡು ನಿಯಮ ರಚಿಸಬೇಕು. ಪೌರಕಾರ್ಮಿಕರ ದಿನಾ ಚರಣೆ ಅಂಗವಾಗಿ ₹ 3,500 ವಿಶೇಷ ಭತ್ಯೆ ನೀಡುತ್ತಿದ್ದು, ಅದನ್ನು ₹ 7 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಹೇಳಿದರು.

ಪೌರಸೇವಾ ವೃಂದದ ನೌಕರರು ಸೇವೆಯಲ್ಲಿರುವಾಗ ಮೃತಪಟ್ಟರೆ ಶವ ಸಂಸ್ಕಾರಕ್ಕೆ ನೀಡುತ್ತಿರುವ ₹ 7,500 ಸಹಾಯಧನವನ್ನು ದ್ವಿಗುಣಗೊಳಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.