ADVERTISEMENT

ಜಮೀರ್‌ಗೆ ಒದ್ದರೆ ಸತ್ಯ ಬಯಲಿಗೆ: ಕೆ.ಎಸ್‌.ಈಶ್ವರಪ್ಪ

ಐಎಂಎ ಹಗರಣ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 15:43 IST
Last Updated 30 ಜೂನ್ 2019, 15:43 IST
   

ಚಿತ್ರದುರ್ಗ: ಪಿಕ್‌ ಪಾಕೇಟ್‌ ಮಾಡುವವರನ್ನು ಪೊಲೀಸರು ಒದ್ದು ವಸೂಲಿ ಮಾಡುತ್ತಾರೆ. ಅದೇ ರೀತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರನ್ನು ಬಂಧಿಸಿ ಲಾಕಪ್‌ನಲ್ಲಿಟ್ಟು ಒದ್ದರೆ ಐಎಂಎ ಲೂಟಿ ಬಯಲಿಗೆ ಬರಲಿದೆ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐಎಂಎ ವಂಚನೆ ಪ್ರಕರಣದಲ್ಲಿ ಸಿಲುಕಿದ ಜಮೀರ್‌ ಅಹಮದ್‌ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್‌ ಜಾರಿ ಮಾಡಿದೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು. ಎಸ್‌ಐಟಿ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.

‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ದಲಿತ ಹಾಗೂ ಹಿಂದುಳಿದವರನ್ನು ಮತ್ತೆ ಮೋಸ ಮಾಡಲು ಸಾಧ್ಯವಿಲ್ಲ. ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಿ ಈಗಾಗಲೇ ಈ ಸಮುದಾಯದ ಎಚ್‌.ವಿಶ್ವನಾಥ್‌ ಹಾಗೂ ಶ್ರೀನಿವಾಸಪ್ರಸಾದ್‌ ಅವರಿಗೆ ಮೋಸ ಮಾಡಿದ್ದಾರೆ. ಅಹಿಂದ ಕಾರ್ಡ್‌ ಬಳಸಿ ಮತ್ತೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ’ ಎಂದರು.

ADVERTISEMENT

‘ಮೈತ್ರಿ ಸರ್ಕಾರವನ್ನು ಬೀಳಿಸುವ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ. ಕಾಂಗ್ರೆಸ್‌–ಜೆಡಿಎಸ್‌ ಒಳಜಗಳ ತಾರಕ್ಕೇರಿದೆ. ಅವರೇ ಬಡಿದಾಡಿಕೊಳ್ಳುತ್ತಿದ್ದಾರೆ. ಮೈತ್ರಿಯ ಹೆಸರಿನಲ್ಲಿ ರಾಜ್ಯದ ಜನರಿಗೆ ಮೋಸ ಆಗುತ್ತಿದೆ. ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಮೆರಿಕಕ್ಕೆ ಹೋಗುವ ಅಗತ್ಯವಿರಲಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.