ನವದೆಹಲಿ: ರಾಜ್ಯದ ರೇಷ್ಮೆ ಕೃಷಿಕರನ್ನು ವಿಮೆ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳಲ್ಲಿ ಪರಿಗಣಿಸಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಆಗ್ರಹಿಸಿದರು.
ಲೋಕಸಭೆ ಅಧಿವೇಶನದಲ್ಲಿ ನಿಯಮ 377ರಡಿ ಸಾರ್ವಜನಿಕ ಹಿತಾಸಕ್ತಿಯ ವಿಷಯವಾಗಿ ರೇಷ್ಮೆ ಕೃಷಿಕರ ಸಂಕಷ್ಟಗಳ ಬಗ್ಗೆ ಅವರು ಬೆಳಕು ಚೆಲ್ಲಿದರು.
‘2016-17 ರಲ್ಲಿ ಜಾರಿಯಾದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ₹1,50,589 ಕೋಟಿ ವಿಮೆಯನ್ನು ರೈತರಿಗೆ ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿಯಡಿ 11 ಕೋಟಿ ರೈತರಿಗೆ ₹2.81 ಲಕ್ಷ ಕೋಟಿ ನೀಡಲಾಗಿದೆ. ಆದರೆ, ಈ ಎರಡೂ ಯೋಜನೆಗಳ ಲಾಭ ರೇಷ್ಮೆ ಕೃಷಿಕರಿಗೆ ಹಾಗೂ ಮೀನುಗಾರರಿಗೆ ದೊರೆಯುತ್ತಿಲ್ಲ. ಸಾಮಾನ್ಯ ರೈತರಂತೆಯೇ ಈ ಕೃಷಿಕರು ಕೂಡ ಆರ್ಥಿಕ ನಷ್ಟ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ’ ಎಂದು ಅವರು ಗಮನ ಸೆಳೆದರು.
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಸೇರಿದಂತೆ ರಾಜ್ಯದಾದ್ಯಂತ ಸುಮಾರು 1.1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಬೆಳೆಯಲಾಗುತ್ತಿದ್ದು, 1.5 ಲಕ್ಷ ಕುಟುಂಬಗಳು ರೇಷ್ಮೆ ಬೆಳೆಯನ್ನೇ ನೆಚ್ಚಿಕೊಂಡಿವೆ. ವರ್ಷದಿಂದ ವರ್ಷಕ್ಕೆ ಬದಲಾಗುತ್ತಿರುವ ಹವಾಮಾನ, ಮಳೆಯ ವೈಪರೀತ್ಯದಿಂದ ಹಿಪ್ಪುನೇರಳೆ ಸೊಪ್ಪು ಹಾಗೂ ರೇಷ್ಮೆ ಹುಳುಗಳಲ್ಲಿ ಅನೇಕ ಸಮಸ್ಯೆಗಳು ಕಂಡುಬರುತ್ತಿವೆ. ನುಸಿ ಮತ್ತು ಕೀಟಗಳ ಹಾವಳಿಯಿಂದ ಹಿಪ್ಪುನೇರಳೆ ಸೊಪ್ಪಿನ ಗುಣಮಟ್ಟ ಮತ್ತು ಇಳುವರಿ ಕುಸಿತವಾಗುತ್ತಿದೆ. ಕಳಪೆ, ರೋಗಪೀಡಿತ ಮೊಟ್ಟೆಗಳ ಚಾಕಿಯಿಂದ ರೇಷ್ಮೆ ಹುಳು ಸಾಕಾಣಿಕೆಗೆ ಸಂಕಷ್ಟ ಎದುರಾಗಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.