ADVERTISEMENT

ಕಬಿನಿ ಜಲಾಶಯಕ್ಕೆ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಬಾಗಿನ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 6:47 IST
Last Updated 20 ಜುಲೈ 2025, 6:47 IST
<div class="paragraphs"><p>ಕಬಿನಿ ಜಲಾಶಯಕ್ಕೆ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಬಾಗಿನ</p></div>

ಕಬಿನಿ ಜಲಾಶಯಕ್ಕೆ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಬಾಗಿನ

   

ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.

ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಲಾಶಯ ಕಳೆದ ಜೂನ್ ಮೊದಲ ವಾರದಲ್ಲೇ ತುಂಬಿತ್ತು. ಅಣೆಕಟ್ಟೆಯ ಗರಿಷ್ಠ ಮಟ್ಟ 2,284 ಅಡಿ ಇದ್ದು, ಇಂದಿನ ಮಟ್ಟ 2,283.33 ಅಡಿ ಇತ್ತು. 15 ಸಾವಿರ ಕ್ಯೂಸೆಕ್ ಒಳಹರಿವಿತ್ತು.

ADVERTISEMENT

ಅಣೆಕಟ್ಟೆಯ ಕಾವಲು ಗೋಪುರದ ಬಳಿ ಬೆಳಿಗ್ಗೆ 11.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿ, ₹ 32.25 ಕೋಟಿ ವೆಚ್ಚದ ಅಣೆಕಟ್ಟೆ ಪುನಶ್ಚೇತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.

ನಂತರ ಮಾತನಾಡಿ, 'ಕಪಿಲಾ ನದಿಯು ಕಾವೇರಿಯ ಪ್ರಮುಖ ಉಪನದಿಯಾಗಿದ್ದು, 1.13 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುತ್ತದೆ. ಪ್ರತಿ ವರ್ಷದಂತೆ ಜಲಾಶಯ ತುಂಬಿದಾಗ ಬಾಗಿನ ಅರ್ಪಿಸಲಾಗಿದ್ದು, ರೈತರಿಗೆ ಒಳ್ಳೆಯದಾಗಲೆಂದು ಕಪಿಲಾ ಮಾತೆಗೆ ಪ್ರಾರ್ಥಿಸಲಾಗಿದೆ‌. ಜಲಾಶಯದ ಎದುರು ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು' ಎಂದರು.

'ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ, ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ಮಹಾದಾಯಿ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಡಿ.ಕೆ.ಶಿವಕುಮಾರ್ ಮಾತನಾಡಿ, 'ಅಣೆಕಟ್ಟೆಯ ಪುನಶ್ಚೇತನಕ್ಕೆ ₹ 88 ಕೋಟಿ ಬಿಡುಗಡೆಗೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಜಲಾಶಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ' ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಎ.ಆರ್.ಕೃಷ್ಣಮೂರ್ತಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.