ADVERTISEMENT

ಪರಮೇಶ್ವರಗೆ ಕುಟುಕಿದ ಕಾಗೋಡು

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 1:03 IST
Last Updated 30 ಜನವರಿ 2020, 1:03 IST
ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ   

ಬೆಂಗಳೂರು: ‘ಪರಮೇಶ್ವರ ಅವರು ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದವರು. ಅದರ ಮೂಲಕವೇ ರಾಜಕೀಯಕ್ಕೆ ಬಂದವರು’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪರಮೇಶ್ವರ ಶಿಕ್ಷಣ ಸಂಸ್ಥೆ ಮೂಲಕ ರಾಜಕೀಯಕ್ಕೆ ಬಂದರೆ, ಸಿದ್ದರಾಮಯ್ಯ ಜನರ ಮಧ್ಯೆ ಇದ್ದು ಬಂದವರು. ಎಲ್ಲರ ಸಹಕಾರದಿಂದ ಅಧಿಕಾರ ಪಡೆದು ಅದನ್ನು ಅನುಭವಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಎಲ್ಲರೂ ಬಹಳ ಉತ್ಸಾಹದಿಂದ ಇರುತ್ತಾರೆ. ಅಧಿಕಾರ ಇಲ್ಲದಾಗ ಎಲ್ಲಿಗೆ ಹೋಗುತ್ತಾರೋ ಗೊತ್ತೇ ಆಗುವುದಿಲ್ಲ’ ಎಂದು ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿರೋಧ ಪಕ್ಷದ ನಾಯಕ ಸ್ಥಾನದ ವಿಷಯದಲ್ಲಿ ನಡೆಯುತ್ತಿರುವ ಗೊಂದಲ ಕುರಿತು ಪ್ರಸ್ತಾಪಿಸಿದ ಅವರು, ‘ಪಕ್ಷದ ರಾಜ್ಯ ಘಟಕದಲ್ಲಿರುವ ಸಮಸ್ಯೆಗಳ ಬಗ್ಗೆ ಇಲ್ಲಿಯೇ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅದಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸ್ಥಿತಿ ಬರಬಾರದು’ ಎಂದರು.

ADVERTISEMENT

‘ದೇಶದಲ್ಲಿ ಅತ್ಯಂತ ಹಿರಿಯ ಪಕ್ಷವಾಗಿರುವ ಕಾಂಗ್ರೆಸ್‌ನ ನಾಯಕರಿಗೆ ಅಹಂ ಹೆಚ್ಚಾಗಿದೆ. ಹಿರಿಯರ ಅನುಭವವನ್ನು ಬಳಸಿಕೊಳ್ಳುವ ಕೆಲಸ ಆಗುತ್ತಿಲ್ಲ. ಹಾಗಾಗಿಯೇ ಕಾಂಗ್ರೆಸ್‌ಗೆ ಇಂತಹ ಸ್ಥಿತಿ ಬಂದಿದೆ. ಸ್ಥಳೀಯವಾಗಿ ಹಿಡಿತ ತಪ್ಪಿದೆ. ಈ ತಪ್ಪನ್ನು ಸರಿಪಡಿಸಿಕೊಂಡು ಪಕ್ಷವನ್ನು ಸಂಘಟಿಸಬೇಕಾದ ಜವಾಬ್ದಾರಿ ಇಂದು ಇದೆ’ ಎಂದು ಕಾಗೋಡು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.