ADVERTISEMENT

ಕಲಬುರ್ಗಿಯಲ್ಲಿ ಲಘು ಭೂಕಂಪನ: ಪರಿಹಾರ ಕೇಂದ್ರ ತೆರೆಯಲು ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 20:22 IST
Last Updated 12 ಅಕ್ಟೋಬರ್ 2021, 20:22 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ ಪ್ರಕರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಿಂಚೋಳಿ ಮತ್ತು ಸೇಡಂನಲ್ಲಿ ತುರ್ತಾಗಿ ಪರಿಹಾರ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳು ಸೂಚನೆ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆ ಕೋಶದ ಅಧಿಕಾರಿಗಳ ಜೊತೆ ಮಂಗಳವಾರ ರಾತ್ರಿ ತುರ್ತು ಸಭೆ ನಡೆಸಿದ ಅವರು, ಭೂಕಂಪನದಿಂದ ಹಾನಿಗೀಡಾದ ಮನೆಗಳಿಗೆ ಪರಿಹಾರ ಒದಗಿಸುವಂತೆ ಮತ್ತು ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿ ನೀಡುವಂತೆ ಸೂಚಿಸಿದರು.

ವಾಡಿಕೆಗಿಂತ ಶೇ 50ರಷ್ಟು ಹೆಚ್ಚು ಮಳೆ: ‘ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ 50ರಷ್ಟು ಹೆಚ್ಚು ಮಳೆ ಆಗಿದೆ. ಬಳ್ಳಾರಿ, ಬೀದರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ಮಳೆ ಕೊರತೆ ಆಗಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.

ADVERTISEMENT

‘ಜೂನ್ ತಿಂಗಳಿನಿಂದ 4.71 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಈಗಾಗಲೇ 1.17 ಲಕ್ಷ ರೈತರಿಗೆ ₹ 105 ಕೋಟಿ ಪರಿಹಾರ ವಿತರಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಪ್ರಕೃತಿ ವಿಕೋಪ ಪರಿಹಾರಕ್ಕೆ ₹ 738 ಕೋಟಿ ಅನುದಾನ ಲಭ್ಯವಿದೆ’ ಎಂದರು.

‘ಅಕ್ಟೊಬರ್ 1ರಿಂದ 12ರವರೆಗೆ ಮಳೆಯಿಂದ ಮೃತಪಟ್ಟ 21 ಜನರಿಗೆ ಕೂಡಲೇ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಮಳೆಯಿಂದ ಹಾನಿಗೆ ಒಳಗಾದವರಿಗೆ ₹ 10 ಸಾವಿರ ತಕ್ಷಣದ ಪರಿಹಾರ ನೀಡಲಾಗುತ್ತದೆ. ಭಾಗಶ: ಹಾನಿಗೊಳಗಾದ 2,500 ಮನೆಗಳಿಗೆ ಹಾಗೂ ಬೆಳೆ ಹಾನಿಗೆ ಕಳೆದ ವರ್ಷದಂತೆ ಎನ್‌ಡಿಆರ್‌ಎಫ್‌ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ. 2,300 ವಿದ್ಯುತ್ ಕಂಬಗಳು ಬಿದ್ದಿದ್ದು, ರಸ್ತೆ, ಸೇತುವೆ, ಶಾಲಾ ಕಟ್ಟಡಗಳ ಹಾನಿಯನ್ನು ಮೌಲ್ಯಮಾಪನ ಮಾಡಿ ಪರಿಹಾರ ನೀಡಲು ಹಣ ಬಿಡುಗಡೆ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.