ಪಣಜಿ: ‘ಕಳಸಾ ಬಂಡೂರಿ ನಾಲಾ ಕಾಮಗಾರಿ ಮುಂದುವರಿಸಲು ಕರ್ನಾಟಕ ಸರ್ಕಾರಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸದಿದ್ದರೆ ಈ ವಿಚಾರವಾಗಿ ಕಾನೂನು ಹೋರಾಟಕ್ಕೆ ಗೋವಾ ಸರ್ಕಾರ ಮುಂದಾಗುವುದು’ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಕಳಸಾ- ಬಂಡೂರಿ ಕಾಮಗಾರಿಯನ್ನು ರದ್ದುಗೊಳಿಸಬೇಕು, ಆ ಯೋಜನೆಯ ಬಗ್ಗೆ ಮರು ಪರಿಶೀಲನೆ ನಡೆಸಲು ಸಮಿತಿ ರಚಿಸಬೇಕು ಎಂದು ಗೋವಾದ ಸರ್ವಪಕ್ಷದ ನಿಯೋಗವು ಇತ್ತೀಚೆಗೆ ಕೇಂದ್ರವನ್ನು ಒತ್ತಾಯಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಮರು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಗೋವಾ ಸರ್ಕಾರಕ್ಕೆ ಎರಡು ದಿನಗಳ ಹಿಂದೆ ಪತ್ರ ಬರೆದಿದ್ದರು. ಆದರೆ ಯೋಜನೆ ರದ್ದುಪಡಿಸಲು ನಿರಾಕರಿಸಿದ್ದರು.
ಈಗ ಸಾವಂತ್ ಅವರು ಕಾನೂನು ಹೋರಾಟದ ಎಚ್ಚರಿಕೆ ನೀಡುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ. ‘15 ದಿನದೊಳಗೆ ನಮ್ಮ ಪರವಾದ ತೀರ್ಮಾನ ಕೈಗೊಳ್ಳದಿದ್ದರೆ ನಾವು ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ. ಗೋವಾ ಸರ್ಕಾರ ಇದಕ್ಕೆ ಸಮರ್ಥವಾಗಿದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.