ADVERTISEMENT

ರಾತ್ರಿ ಕರ್ಫ್ಯೂ ಉಲ್ಲಂಘಿಸಿದರೆ ಪ್ರಕರಣ ದಾಖಲು: ಕಮಲ್‌ ಪಂತ್‌ ಎಚ್ಚರಿಕೆ

ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2021, 17:49 IST
Last Updated 27 ಡಿಸೆಂಬರ್ 2021, 17:49 IST
ಕಮಲ್ ಪಂತ್
ಕಮಲ್ ಪಂತ್   

ಬೆಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಇದೇ 28ರಿಂದ 2022ರ ಜನವರಿ 7ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಎಚ್ಚರಿಸಿದ್ದಾರೆ.

‘ಸರ್ಕಾರದ ಆದೇಶದಂತೆಯೇ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಆಸ್ಪತ್ರೆ ಸೇರಿದಂತೆ ಇತರೆ ತುರ್ತು ಕಾರ್ಯಗಳಿಗಾಗಿ ಮನೆಯಿಂದ ಹೊರ ಬರುವವರು ಗಸ್ತಿನಲ್ಲಿರುವ ಪೊಲೀಸರಿಗೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವವರೂ ಗುರುತಿನ ಚೀಟಿ ಹೊಂದಿರಬೇಕು. ಬಸ್‌, ರೈಲು ಹಾಗೂ ವಿಮಾನಗಳ ಮೂಲಕ ನಗರದಿಂದ ಬೇರೆ ಊರುಗಳಿಗೆ ಹೋಗುವವರು ಕೂಡ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಸೆಕ್ಷನ್‌ 188ರ ಅಡಿಯಲ್ಲಿ ಪ್ರಕರಣ ದಾಖಲಿಸುವುದು ಅನಿವಾರ್ಯ’ ಎಂದು ಸೋಮವಾರ ಇಲ್ಲಿ ಹೇಳಿದರು.

‘ಪಬ್‌, ಹೋಟೆಲ್‌ ಹಾಗೂ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ 50ರಷ್ಟು ಮಂದಿಗೆ ಅವಕಾಶವಿದೆ. ಅಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ನಿಯಮ ಉಲ್ಲಂಘಿಸುವ ಪಬ್‌, ರೆಸ್ಟೋರೆಂಟ್‌ ಹಾಗೂ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದರು.

ADVERTISEMENT

‘ಎಂ.ಜಿ.ರಸ್ತೆ, ಕೋರಮಂಗಲ, ಇಂದಿರಾನಗರದಲ್ಲಿ ಹೊಸವರ್ಷ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಈ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನೂ ಬಂದ್‌ ಮಾಡಲಾಗುತ್ತದೆ. ಜೊತೆಗೆ ಎಲ್ಲೆಡೆಯೂ ಈಗಾಗಲೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಬಿಗಿ ಪೊಲೀಸ್‌ ಬಂದೋಬಸ್ತ್‌ ಕೂಡ ಮಾಡಲಾಗುತ್ತದೆ. ಈ ರಸ್ತೆಗಳಲ್ಲಿ ಸಂಚರಿಸುವವರನ್ನೆಲ್ಲಾ ಪೊಲೀಸರು ತ‍ಪಾಸಣೆ ನಡೆಸಲಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.