ADVERTISEMENT

ಕನ್ನಡ ಕಡೆಗಣನೆ ಕೈಗಾರಿಕಾ ಒಕ್ಕೂಟ: ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:20 IST
Last Updated 7 ಆಗಸ್ಟ್ 2022, 7:20 IST

ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ನಗರದಲ್ಲಿ ಭಾಗವಹಿಸಿದ್ದ ‘ಸಂಕಲ್ಪ ದಿಂದ ಸಿದ್ಧಿ’ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯ ಆಗಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕನ್ನಡ ಕಡೆಗಣಿಸಿದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚಿಸಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಆಡಳಿತದ ಎಲ್ಲ ಹಂತಗಳಲ್ಲಿಯೂ ಕನ್ನಡ ಬಳಸಬೇಕು. ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿದೆ. ಈ ಬಗ್ಗೆ ಸಾರ್ವಜನಿಕರೂ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರ ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಲು ಕಾಲಕಾಲಕ್ಕೆ ಆದೇಶಗಳನ್ನು ಹೊರಡಿಸಿದೆ. ಅದಾಗಿಯೂ ಕೈಗಾರಿಕಾ ಒಕ್ಕೂಟ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿದೆ. ಇದು ರಾಜ್ಯ ಸರ್ಕಾರದ ಕನ್ನಡ ಪರ ಆದೇಶಗಳ ಸ್ಪಷ್ಟ ಉಲ್ಲಂಘನೆ.‌ ಸಂಬಂಧಪಟ್ಟ ಅಧಿಕಾರಿ, ನೌಕರರ ಮೇಲೆ ಶಿಸ್ತು ಕ್ರಮ ಜಾರಿಗೊಳಿಸಬೇಕು’ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.