ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಏಕ ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿ ಹಿಂದಿ ಭಾಷೆ ಗೊತ್ತಿರುವ ವಿದ್ಯಾರ್ಥಿಗಳನ್ನಷ್ಟೆ ಹೊರ ರಾಜ್ಯಗಳಿಗೆ ಕರೆದೊಯ್ಯುವ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ‘ಹಿಂದಿ ಭಾಷೆಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆಯುಳ್ಳ, ಸಾಂಸ್ಕೃತಿಕ ಕ್ರೀಡಾ ಸ್ಫೂರ್ತಿ ಹೊಂದಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಹೊರ ರಾಜ್ಯಗಳಿಗೆ ಕಳುಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಕನ್ನಡ ಬಲ್ಲ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ. ಹಿಂದಿ ಭಾಷೆ ತಿಳಿಯದ, ಕನ್ನಡ ಭಾಷಾ ಜ್ಞಾನ ಹೊಂದಿರುವ ವಿದ್ಯಾರ್ಥಿಗಳಿಗೂ ಅನ್ಯ ರಾಜ್ಯಗಳಿಗೆ ಭೇಟಿ ನೀಡುವ ಅವಕಾಶ ನೀಡಬೇಕು. ಭಾಷೆಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭೇದಭಾವ ಬಿತ್ತುವ ಇಲಾಖೆಯ ನಡೆ ಸರಿಯಾದ ಕ್ರಮವಲ್ಲ’ ಎಂದು ಹೇಳಿದ್ದಾರೆ.
‘ಹಿಂದಿ ಭಾಷೆಯಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರೆ, ಹಿಂದಿ ಭಾಷೆ ತಿಳಿಯದ ಇತರೆ ವಿದ್ಯಾರ್ಥಿಗಳಲ್ಲಿ ಭಾಷಾ ತಾರತಮ್ಯದ ಮನೋಭಾವ ಬೆಳೆಯುತ್ತದೆ. ಹೀಗಾಗಿ, ಇಲಾಖೆ ಈ ಆದೇಶವನ್ನು ಹಿಂಪಡೆದು, ಹಿಂದಿ ಭಾಷೆಯಲ್ಲಿ ಮಾತನಾಡುವ ಎನ್ನುವುದರ ಬದಲಿಗೆ ಪ್ರತಿಭೆ ಹೊಂದಿದ ವಿದ್ಯಾರ್ಥಿಗಳೆಂದು ಬದಲಾಯಿಸಬೇಕು’ ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.