ADVERTISEMENT

ಗ್ರಾಮಗಳ ಕನ್ನಡ ಹೆಸರು ಬದಲಿಸಿದರೆ ಹೋರಾಟ: ಟಿ.ಎಸ್. ನಾಗಾಭರಣ ಎಚ್ಚರಿಕೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 26 ಜೂನ್ 2021, 16:35 IST
Last Updated 26 ಜೂನ್ 2021, 16:35 IST
ಟಿ.ಎಸ್. ನಾಗಾಭರಣ
ಟಿ.ಎಸ್. ನಾಗಾಭರಣ   

ಬೆಂಗಳೂರು: ‘ರಾಜ್ಯದ ಗಡಿಯಲ್ಲಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮತ್ತು ಕೆಲವು ಗ್ರಾಮಗಳ ಕನ್ನಡ ಹೆಸರನ್ನು ಮಲಯಾಳಕ್ಕೆ ಬದಲಾಯಿಸಿದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್. ನಾಗಾಭರಣ ಎಚ್ಚರಿಕೆ ನೀಡಿದ್ದಾರೆ.

‘ಶತಮಾನಗಳ ಹಿಂದೆಯೇ ಕರ್ನಾಟಕದ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಗಳನ್ನು ಒಗ್ಗೂಡಿಸಿ, ಅಲ್ಲಿನ ಗ್ರಾಮಗಳಿಗೆ ಕನ್ನಡದ ಹೆಸರುಗಳನ್ನು ನಾಮಕರಣ ಮಾಡಲಾಗಿದೆ. ಆದರೆ, ಈಗ ಅದನ್ನು ಬದಲಾಯಿಸಲು ಹೊರಟಿರುವ ಹುನ್ನಾರ ಸರಿಯಾದ ಕ್ರಮವಲ್ಲ. ಅಲ್ಲದೆ, ಆ ಪ್ರದೇಶದಲ್ಲಿ ಕನ್ನಡ ಭಾಷೆಯನ್ನೇ ಹೆಚ್ಚಾಗಿ ಬಳಸುವ ಜನರಿದ್ದಾರೆ. ಅಪಾರ ಸಂಖ್ಯೆಯಲ್ಲಿ ಕನ್ನಡಿಗರಿರುವ ಗ್ರಾಮಗಳ ಹೆಸರನ್ನು ಬದಲಾವಣೆ ಮಾಡುವ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುವ ಕೆಲಸವನ್ನು ಕೇರಳ ಸರ್ಕಾರ ಮಾಡಬಾರದು’ ಎಂದು ತಿಳಿಸಿದ್ದಾರೆ.

‘ಗಡಿಭಾಗದ ಸಮಸ್ಯೆಗಳಿಗೆ ಸೂಕ್ಷ್ಮತೆ ಮತ್ತು ಬದ್ಧತೆಯಿಂದ ನಡೆದುಕೊಳ್ಳಬೇಕಾಗಿರುವುದು ಎರಡೂ ರಾಜ್ಯಗಳ ಜವಾಬ್ದಾರಿ. ಇದನ್ನು ಕೇರಳದ ಸರ್ಕಾರ ಅರಿತುಕೊಳ್ಳಬೇಕು. ಈ ಬಗ್ಗೆ ಕೂಡಲೇ ಅಲ್ಲಿನ ಸರ್ಕಾರ ಕ್ರಮ ಕೈಗೊಂಡು, ಗ್ರಾಮಗಳಿಗೆ ಇರುವ ಕನ್ನಡದ ಹೆಸರುಗಳನ್ನು ಹಾಗೆಯೇ ಉಳಿಸಿಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳು ಮತ್ತು ಕಂದಾಯ ಇಲಾಖೆಗೆ ಸೂಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘ಮಧೂರು, ಮಲ್ಲ, ಪಿಳಿಕುಂಜೆ, ಹೊಸದುರ್ಗ, ಕುಂಬಳೆ ಸೇರಿದಂತೆ ಅಲ್ಲಿನ ವಿವಿಧ ಗ್ರಾಮಗಳಿಗಿರುವ ಕನ್ನಡದ ಹೆಸರುಗಳು ಅತ್ಯಂತ ಅರ್ಥಪೂರ್ಣವಾಗಿವೆ. ಹೀಗಿರುವಾಗ ಕನ್ನಡದ ಅಸ್ಮಿತೆಗೆ ಧಕ್ಕೆ ತರುವ ಕೆಲಸವನ್ನು ಮಾಡಬಾರದು. ಈ ಪ್ರಕ್ರಿಯೆಯಲ್ಲಿ ಕೇರಳ ಸರ್ಕಾರ ಮುಂದುವರೆದರೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡು ಹೊರನಾಡಿನ ವಿವಿಧ ಸಂಘಟನೆಗಳೊಂದಿಗೆ ಹೋರಾಟ ನಡೆಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.