ADVERTISEMENT

ಹೊಸ ಆವಿಷ್ಕಾರಗಳಲ್ಲಿ ಕನ್ನಡ ಭಾಷೆ ಬಳಸಿ: ಕವಿ ಬಿ.ಆರ್. ಲಕ್ಷ್ಮಣ ರಾವ್ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 16:34 IST
Last Updated 12 ಏಪ್ರಿಲ್ 2022, 16:34 IST
ಬಿ.ಆರ್‌. ಲಕ್ಷ್ಮಣ ರಾವ್‌
ಬಿ.ಆರ್‌. ಲಕ್ಷ್ಮಣ ರಾವ್‌   

ಬೆಂಗಳೂರು: ‘ಕನ್ನಡ ಹೃದಯದ ಭಾಷೆಯಾದರೆ ಮಾತ್ರವೇ ಜಗತ್ತಿನೆಲ್ಲೆಡೆ ಕನ್ನಡ ಪಸರಿಸಲು ಸಾಧ್ಯ. ಮುಂದಿನ ಪೀಳಿಗೆಯ ಯುವಕರು ಹೊಸ ಆವಿಷ್ಕಾರಗಳಲ್ಲೂ ಕನ್ನಡ ಬಳಸುವ ಬಗ್ಗೆ ಯೋಚಿಸಿ, ಕಾರ್ಯಗತ ಮಾಡಬೇಕು’ ಎಂದು ಕವಿ ಬಿ.ಆರ್. ಲಕ್ಷ್ಮಣ ರಾವ್ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಗರದಲ್ಲಿ ಮಂಗಳವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿದ್ಯಾರ್ಥಿಗಳಿಗೆ 2019–20ನೇ ಸಾಲಿನ ‘ಕನ್ನಡ ಮಾಧ್ಯಮ ಪ್ರಶಸ್ತಿ’ ಪ್ರದಾನ ಮಾಡಿ, ಮಾತನಾಡಿದರು.

‘ಭಾಷೆ ಎಂಬುದು ನಮ್ಮ ಅಸ್ಮಿತೆ ಮತ್ತು ಸಾಂಸ್ಕೃತಿಕ ಧಾತು. ನಾವು ಯಾವುದೇ ರಾಜ್ಯ, ದೇಶದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ನಮ್ಮೆಲ್ಲರನ್ನೂ ಒಗ್ಗೂಡಿಸಲಿದೆ’ ಎಂದರು.

ADVERTISEMENT

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ‘ಜಾಗತಿಕ ಮಟ್ಟದಲ್ಲಿ ಕನ್ನಡ ಕಟ್ಟಲು ಹಾಗೂ ಕನ್ನಡವನ್ನು ಉದ್ಯೋಗದ ಭಾಷೆಯನ್ನಾಗಿಸಲು ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ’ ಎಂದು ತಿಳಿಸಿದರು.

ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡಿದ ತೆಲಂಗಾಣದ 15 ವಿದ್ಯಾರ್ಥಿಗಳು, ಆಂಧ್ರ ಪ್ರದೇಶದ 71 ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ವ್ಯಾಸಂಗ ಮಾಡಿದ 4 ವಿದ್ಯಾರ್ಥಿಗಳಿಗೆ ‘ಕನ್ನಡ ಮಾಧ್ಯಮ ಪ್ರಶಸ್ತಿ’ ನೀಡಲಾಯಿತು. ಒಟ್ಟು 90 ವಿದ್ಯಾರ್ಥಿಗಳಿಗೆ ₹ 9.91 ಲಕ್ಷ ನಗದು ಬಹುಮಾನ ವಿತರಿಸಲಾಯಿತು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.