ADVERTISEMENT

ಯುಜಿಸಿ–ಎನ್‌ಇಟಿ, ಮತ್ತೊಮ್ಮೆ ಪರೀಕ್ಷೆ ನಡೆಸಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಯುಜಿಸಿಗೆ ಆಗ್ರಹಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 16:29 IST
Last Updated 28 ಡಿಸೆಂಬರ್ 2021, 16:29 IST
ಟಿ.ಎಸ್. ನಾಗಾಭರಣ
ಟಿ.ಎಸ್. ನಾಗಾಭರಣ   

ಬೆಂಗಳೂರು: ‘ಯುಜಿಸಿ–ಎನ್‌ಇಟಿ’ ಪರೀಕ್ಷೆಯ ಕನ್ನಡ ಐಚ್ಛಿಕ ಭಾಷೆ ಪತ್ರಿಕೆಯಲ್ಲಿ ಪ್ರಶ್ನೆಗಳನ್ನು ಹಿಂದಿ ಭಾಷೆಯಲ್ಲಿ ನೀಡಿರುವರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ನಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಅವರು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷ ಕೆ. ಸಂಜಯ್ ಮೂರ್ತಿ ಅವರಿಗೆ ಪತ್ರ ಬರೆದಿದ್ದಾರೆ.

‘ರಾಜ್ಯದ ವಿದ್ಯಾರ್ಥಿಗಳು ಹಲವು ದಿನಗಳಿಂದ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದರು. ಪರೀಕ್ಷಾ ಸಂಸ್ಥೆಯ ಲೋಪದಿಂದ ಕನ್ನಡದ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ 10 ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ 90 ಪ್ರಶ್ನೆಗಳನ್ನು ಹಿಂದಿ ಭಾಷೆಯಲ್ಲಿ ನೀಡಲಾಗಿದೆ. ಇಂತಹ ಪ್ರಮಾದಗಳು ಮುಂದೆಂದೂ ಆಗದಂತೆ ಯುಜಿಸಿ-ಎನ್‌ಇಟಿ ಸಂಸ್ಥೆ ಅಗತ್ಯ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘ಇದು ದುರುದ್ದೇಶಪೂರಿತ ನಡೆಯಾಗಿದೆ. ಅಧಿಕಾರಿಗಳ ದಿವ್ಯನಿರ್ಲಕ್ಷ್ಯದಿಂದ ಭಾಷಾ ಸಾಮರಸ್ಯ ಹಾಳಾಗಲಿದೆ. ಅವರ ಬೇಜವಾಬ್ದಾರಿಯಿಂದಾಗಿ ಕನ್ನಡದ ಸಾವಿರಾರು ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದಾರೆ. ಯುಜಿಸಿ-ಎನ್‌ಇಟಿ ಸಂಸ್ಥೆಯ ಈ ನಡೆಯಿಂದ ವಿದ್ಯಾರ್ಥಿಗಳ ಓದಿನ ಜೊತೆಗೆ ಅವರ ಭವಿಷ್ಯವೂ ಮಂಕಾಗಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಕನ್ನಡ ಐಚ್ಛಿಕ ಭಾಷೆಯ ಪರೀಕ್ಷೆಯನ್ನು ಸಂಸ್ಥೆ ಮತ್ತೊಮ್ಮೆ ನಡೆಸಬೇಕು. ಎಲ್ಲ ಕನ್ನಡದ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.