ಬೆಳಗಾವಿ: ‘ರಾಜ್ಯದಲ್ಲಿ ರೈಲ್ವೆ ಇಲಾಖೆಯಲ್ಲಿ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
‘ರೈಲು ನಿಲ್ದಾಣಗಳಿಗೆ ವಿದೇಶಿಯರು ಮತ್ತು ವಿವಿಧ ರಾಜ್ಯಗಳ ಜನರು ಬರುತ್ತಾರೆ. ಅವರಿಗೆ ಹಿಂದಿ, ಇಂಗ್ಲಿಷ್ನಲ್ಲಿ ಮಾಹಿತಿ ಕೊಡಲಾಗುತ್ತಿದೆ. ಸ್ಥಳೀಯರಿಗೆ ಕನ್ನಡದಲ್ಲಿಯೇ ಮಾಹಿತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಡಳಿತ ವ್ಯವಸ್ಥೆಯಲ್ಲಿ ಮತ್ತು ಸಂವಹನಕ್ಕಾಗಿ ಕನ್ನಡ ಬಳಕೆಗೆ ಮತ್ತಷ್ಟು ಒತ್ತು ನೀಡಲಾಗುವುದು. ಕನ್ನಡ ಬಲ್ಲವರ ನೇಮಕಕ್ಕೂ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.
‘ಪ್ರಯಾಣಿಕರಿಗೆ ಆದ್ಯತೆ ಮೇರೆಗೆ ಹೆಚ್ಚಿನ ಸೇವೆ ಒದಗಿಸಲಾಗುತ್ತಿದೆ. ನ. 1ರಿಂದ ಬೆಳಗಾವಿಗೆ ಬರುವ ವಿಶೇಷ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಿಸಲಾಗುವುದು. ವಿಮಾನನಿಲ್ದಾಣ ಮಾದರಿಯಲ್ಲಿ ಬೆಳಗಾವಿ ರೈಲು ನಿಲ್ದಾಣ ಅಭಿವೃದ್ಧಿಪಡಿಸಲಾಗುವುದು. ಶಿಥಿಲವಾಗಿರುವ ರೈಲ್ವೆ ಪೊಲೀಸ್ ಠಾಣೆಯನ್ನು ಉತ್ತಮ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಜೋಡಿ ಮಾರ್ಗ ಕಾಮಗಾರಿ ಪೂರ್ಣಗೊಂಡರೆ ಮುಂಬೈನಿಂದ ಬೆಂಗಳೂರನ್ನು ಹತ್ತೇ ತಾಸುಗಳಲ್ಲಿ ತಲುಪಬಹುದಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.