ADVERTISEMENT

ಗಡಿ ಭಾಗದಲ್ಲಿ ವರ್ಷಪೂರ್ತಿ ಕನ್ನಡ ಕಾರ್ಯಕ್ರಮ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 19:32 IST
Last Updated 26 ಮಾರ್ಚ್ 2021, 19:32 IST

ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ವರ್ಷಪೂರ್ತಿ ಕನ್ನಡ ಭಾಷೆ ಮತ್ತು ಸಂಸ್ಕೃತಿ ಜಾಗೃತಿಗೊಳಿಸುವ ಕಾರ್ಯಕ್ರಮಗಳನ್ನು ನಡೆಸಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.

ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ವಿ. ವಸಂತಕುಮಾರ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಹಾಗೂ ಸದಸ್ಯರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು. ಗಡಿ ಪ್ರದೇಶದಲ್ಲಿ ನಾಡು–ನುಡಿಯ ಶ್ರೇಯೋಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕರಿಸಲಾಯಿತು.

ಗಡಿ ನಾಡಿನ ಜಿಲ್ಲೆಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಕನ್ನಡ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸಭೆಯಲ್ಲಿದ್ದ ಎಲ್ಲರೂ ಸಹಮತ ಸೂಚಿಸಿದರು. ಗಡಿನಾಡಿನ ಸಾಧಕರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಕೂಡ ತೀರ್ಮಾನಿಸಲಾಯಿತು. ಇದೇ ವೇಳೆ, 2021–22ನೇ ಸಾಲಿನ ಕ್ರಿಯಾಯೋಜನೆಗೆ ಅನುಮೋದನೆ ಪಡೆಯಲಾಯಿತು. ಕೊರತೆಯಾದ ಅನುದಾನದ ಬಗ್ಗೆ ಆರ್ಥಿಕ ಇಲಾಖೆಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.