ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಇದೇ ಭಾನುವಾರ (ನ. 21) ಮತದಾನ ನಡೆಯಲಿದೆ.
ಈ ಬಾರಿ 3 ಲಕ್ಷಕ್ಕೂ ಅಧಿಕ ಮಂದಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಮತ ಚಲಾವಣೆ ನಡೆಯಲಿದೆ. 400ಕ್ಕೂ ಅಧಿಕ ಮತಗಟ್ಟೆಗಳನ್ನು ಈ ಬಾರಿ ಗುರುತಿಸಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಇದ್ದಾರೆ.
ಯಾದಗಿರಿ ಜಿಲ್ಲಾ ಘಟಕ ಹಾಗೂ ತಮಿಳುನಾಡು ಗಡಿನಾಡ ಘಟಕದ ಅಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ಮಾತ್ರ ಕಣದಲ್ಲಿದ್ದಾರೆ. ಹೀಗಾಗಿ, ಅಲ್ಲಿಅವಿರೋಧ ಆಯ್ಕೆ ನಡೆಯಲಿದೆ. ಗೋವಾ ಗಡಿನಾಡು ಘಟಕಕ್ಕೆ ಯಾವುದೇ ಅಭ್ಯರ್ಥಿ ಸ್ಪರ್ಧಿಸಿಲ್ಲ. ಕೇರಳ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಗಡಿನಾಡು ಘಟಕಕ್ಕೆ ಚುನಾವಣೆ ನಡೆಯಲಿದೆ.
ತಾಲ್ಲೂಕುಗಳು, ಕೆಲವು ಹೋಬಳಿಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೊರನಾಡು, ಹೊರದೇಶದ ಮತದಾರರಿಗೆ ಅಂಚೆ ಮೂಲಕ ಮತಪತ್ರಗಳನ್ನು ರವಾನಿಸಲಾಗಿದ್ದು, ಈಗಾಗಲೇ ಕೆಲವರು ಮತ ಚಲಾಯಿಸಿ ಕಳುಹಿಸುತ್ತಿದ್ದಾರೆ. ಇದೇ 23ರ ಬೆಳಿಗ್ಗೆ 11 ಗಂಟೆಯೊಳಗೆ ಕೇಂದ್ರ ಚುನಾವಣಾಧಿಕಾರಿ ಕಚೇರಿಗೆ ತಲುಪಿದ ಮತಪತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.