ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಮುಖಂಡರ ನಡುವಿನ ವಾಕ್ಸಮರ ಜೋರಾಗಿದೆ.
ಕೋಲಾರದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅವರು ವರುಣದಲ್ಲೇ ಗೆಲ್ಲುವುದು ಕಷ್ಟ, ಹಾಗಾಗಿ ಅದನ್ನು ಸರಿಯಾಗಿ ನೋಡಿಕೊಳ್ಳಲಿ. ಅವರನ್ನು ನಿಲ್ಲಿಸಿದರೆ ಕೋಲಾರದಲ್ಲೂ ಕಾಂಗ್ರೆಸ್ ಸೋಲುತ್ತದೆ ಎಂಬುದನ್ನು ವರಿಷ್ಠರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವರಿಕೆ ಮಾಡಿಕೊಟ್ಟಿದ್ದಾರೆ’ ಎಂದು ವ್ಯಂಗ್ಯವಾಡಿದೆ.
ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ವಿಚಾರ ನಾಲ್ಕೈದು ತಿಂಗಳಿನಿಂದ ಚಾಲ್ತಿಯಲ್ಲಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ವರುಣ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಆದರೆ, ತಾವು ಕೋಲಾರದಿಂದ ಟಿಕೆಟ್ ಕೇಳಿರುವುದಾಗಿಯೂ ಕೇಳಿಕೊಂಡಿದ್ದಾರೆ. ಹಾಗಾಗಿ ಅವರು ಕೋಲಾರದಿಂದಲೂ ಕಣಕ್ಕಿಳಿಯುವರೇ ಎಂಬುದು ಕುತೂಹಲ ಮೂಡಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ 166 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಪಟ್ಟಿ ಪ್ರಕಟವಾದ ಬೆನ್ನಲ್ಲೇ, ‘ಕೈ’ಪಾಳಯದಲ್ಲಿ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ.
ಇತ್ತ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.