ಬೆಂಗಳೂರು: ‘ಕೇಂದ್ರ ಸರ್ಕಾರ ಮತ್ತೆ ಆರಂಭಿಸಿರುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಎಂಜಿಎಸ್ವೈ) ಮತ್ತು ರಾಜ್ಯ ಸರ್ಕಾರದ ಪ್ರಗತಿಪಥ ಅನುದಾನವನ್ನು ಗ್ರಾಮೀಣ ರಸ್ತೆಗಳ ಸುಧಾರಣೆಗೆ ಬಳಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ನ ಬಿ. ಶಿವಣ್ಣ ಮತ್ತು ರಾಘವೇಂದ್ರ ಬಸವರಾಜ ಹಿಟ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಮಳೆಯಿಂದಾಗಿ ಗ್ರಾಮೀಣ ಭಾಗದಲ್ಲಿ ರಸ್ತೆಗಳು ಹಾನಿಯಾಗಿವೆ. ಮುಖ್ಯಮಂತ್ರಿ ಜೊತೆ ಬಳಿ ಚರ್ಚಿಸಿ, ರಸ್ತೆಗಳ ದುರಸ್ತಿಗೆ ವಿಶೇಷ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು’ ಎಂದರು.
‘ಎಂಜಿಎಸ್ವೈಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿರುವ ಬಜೆಟ್ನಲ್ಲಿ ಈ ಯೋಜನೆಯನ್ನು ಮತ್ತೆ ಆರಂಭಿಸುವುದಾಗಿ ಪ್ರಕಟಿಸಿದ್ದಾರೆ. ಪ್ರಗತಿಪಥ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಈಗಾಗಲೇ ಅನುಮೋದನೆ ನೀಡಿದೆ. ಈ ಎಲ್ಲ ಅನುದಾನಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.