ADVERTISEMENT

ಬೆಳಗಾವಿಯಲ್ಲೇ ವಿಧಾನಮಂಡಲ ಅಧಿವೇಶನ ನಡೆಸಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 19:39 IST
Last Updated 14 ಜುಲೈ 2021, 19:39 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಬೆಳಗಾವಿಯಲ್ಲಿ ತಕ್ಷಣ ವಿಧಾನಮಂಡಲ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಕಾಯ್ದೆ– 2005ರ ಸೆಕ್ಷನ್ 3 ಮತ್ತು 4ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ, ಸರ್ಕಾರವು ಈವರೆಗೂ ಕೂಡ ಅಧಿವೇಶನ ನಡೆಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ನಿಯಮಬಾಹಿರ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

‘ಜನರ ಸಂಕಷ್ಟಗಳ ಕುರಿತು ಚರ್ಚಿಸಿ, ಪರಿಹಾರಗಳನ್ನು ಕಂಡುಕೊಳ್ಳಲು ನಿಯಮದ ಪ್ರಕಾರ ಪ್ರತಿವರ್ಷ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕು. ಜನವರಿಯಲ್ಲಿ 15, ಮಾರ್ಚ್‌ನಲ್ಲಿ 20, ಜುಲೈನಲ್ಲಿ 15, ನವೆಂಬರ್‌ನಲ್ಲಿ 10 ಹೀಗೆ ವರ್ಷದಲ್ಲಿ ಕನಿಷ್ಠ ನಾಲ್ಕು ಅಧಿವೇಶನ ನಡೆಸಬೇಕು. ಆದರೆ, ಬಿಜೆಪಿ ಸರ್ಕಾರ ಈ ನಿಯಮಗಳನ್ನು ಗಾಳಿಗೆ ತೂರುತ್ತಿದೆ. 2020ರಲ್ಲಿ 31 ದಿನ, 2021ರಲ್ಲಿ ಈವರೆಗೆ 20 ದಿನ ಅಧಿವೇಶನ ನಡೆದಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬೆಳಗಾವಿಯಲ್ಲಿ ಅಧಿವೇಶನವನ್ನೇ ನಡೆಸಿಲ್ಲ. ಸರ್ಕಾರದ ಈ ಕ್ರಮ ಅಕ್ಷಮ್ಯ’ ಎಂದೂ ಪತ್ರದಲ್ಲಿ ಹೇಳಿದ್ದಾರೆ.

ADVERTISEMENT

‘ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳು ಕುಸಿದು ಬಿದ್ದಿದೆ. ಕೋವಿಡ್‌ ಮೂರನೇ ಅಲೆಯ ಭೀತಿ ಜನರನ್ನು ಕಾಡುತ್ತಿದೆ’ ಎಂದೂ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.