ADVERTISEMENT

ಬಿಜೆಪಿ–ಜೆಡಿಎಸ್‌ ಜಂಟಿ ಹೋರಾಟಕ್ಕೆ ತಿರುಗೇಟು ನೀಡಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 18:57 IST
Last Updated 6 ಡಿಸೆಂಬರ್ 2023, 18:57 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಳಗಾವಿ: ಬಿಜೆಪಿ– ಜೆಡಿಎಸ್‌ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗಿದ್ದು, ಅದಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಸ್ವಪಕ್ಷೀಯ ಶಾಸಕರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ರಾತ್ರಿ ಇಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗದ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ಚುನಾವಣಾ ಪ್ರಚಾರ ವೇಳೆ ಸ್ಪೀಕರ್‌ ವಿಷಯದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿರುವುದನ್ನು ವಿರೋಧ ಪಕ್ಷಗಳು ದೊಡ್ಡದಾಗಿ ಬಿಂಬಿಸಬಹುದು. ಈ ವಿಷಯ ಪ್ರಸ್ತಾಪವಾದಾಗ ಎಲ್ಲರೂ ಸಮರ್ಥನೆಗೆ ನಿಲ್ಲುವಂತೆ ಸಲಹೆ ನೀಡಿದರು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. 

ವಿಧಾನ ಮಂಡಲದ ಅಧಿವೇಶನದಲ್ಲಿ ಮಾತನಾಡುವ ವೇಳೆಯಲ್ಲಿ ಬಿಜೆಪಿ, ಜೆಡಿಎಸ್‌ ಶಾಸಕರು ಕೆರಳಿಸಬಹುದು. ಆದರೆ, ನಾವು ಅವರ ಮಾತುಗಳಿಗೆ ಕೆರಳಿ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ಶಾಸಕರಿಗೆ ತಿಳಿ ಹೇಳಿದರು ಎಂದೂ ಮೂಲಗಳು ಹೇಳಿವೆ. 

ADVERTISEMENT

ರಾಜ್ಯ ಎದುರಿಸುತ್ತಿರುವ ಬರ ವಿಷಯದಲ್ಲಿಯೂ ಬಿಜೆಪಿ, ಜೆಡಿಎಸ್‌ ಸದಸ್ಯರು ಸರ್ಕಾರದ ವಿರುದ್ಧ ಮಾತನಾಡಬಹುದು. ಈ ವೇಳೆಯಲ್ಲಿ ಸಮರ್ಪಕವಾಗಿ ಉತ್ತರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. 

ಕೆಲವು ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಬೇಕು. ಗುಂಡಿ ಮುಚ್ಚಲು ಕೂಡಾ ಹಣದ ಕೊರತೆಯಿದೆ ಎಂದಾಗ, ‘ಸರ್ಕಾರ ಬಂದು ಆರು ತಿಂಗಳು ಆಗಿದೆ. ‘ಗ್ಯಾರಂಟಿ’ ಯೋಜನೆಗಳ ಅನುಷ್ಶಾನ ಯಶಸ್ವಿಯಾಗಿದೆ. ಆದರೆ, ವಿರೋಧ ಪಕ್ಷಗಳ ಶಾಸಕರು ಈ ಯೋಜನೆಗಳ ಬಗ್ಗೆ ಆರೋಪ ಮಾಡಬಹುದು. ಈ ಬಗ್ಗೆ ಎಚ್ಚರ ಇರಲಿ’ ಎಂದು ತಿಳಿಸಿದ ಸಿದ್ದರಾಮಯ್ಯ,‘₹ 25 ಕೋಟಿಯಂತೆ ವಿಶೇಷ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದರು ಎಂದೂ ಮೂಲಗಳು ತಿಳಿಸಿವೆ.

ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮವಾಗಿದೆ. ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಸಿಕ್ಕಿದ ತಕ್ಷಣ ಪ್ರಕಟಿಸಲಾಗುವುದು ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದೂ ಗೊತ್ತಾಗಿದೆ.

ಡಿಕೆಶಿ ಗೈರು: ಶಾಸಕಾಂಗ ಪಕ್ಷದ ಸಭೆಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗೈರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.