ಬೆಳಗಾವಿ: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿ ಕೂಡಾ ಸಕಾರಾತ್ಮಕ ನಿಲುವು ಹೊಂದಿದ್ದಾರೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ‘ಈ ಸಾಲಿನಲ್ಲಿ ಆಯ್ಕೆಯಾಗಿ ಹುದ್ದೆ ವಂಚಿತರಾದ ಅಭ್ಯರ್ಥಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಆದರೆ, ಕಾನೂನಾತ್ಮಕವಾಗಿ ಸಂಕೀರ್ಣವಾದ ವಿಷಯ. ಹೀಗಾಗಿ, ಅಂತಿಮ ತೀರ್ಮಾನಕ್ಕೆ ಬರಲು ಕಾಲಾವಕಾಶ ಅಗತ್ಯವಿದೆ’ ಎಂದರು.
‘ನೇಮಕಾತಿಯಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆ ಕೈ ಬಿಡಲು ಸರ್ಕಾರ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತ ಮಾಹಿತಿಯನ್ನು ರಾಷ್ಟ್ರಪತಿಗೆ ಕಳುಹಿಸಬೇಕಿದ್ದು, ಆ ಪ್ರಕ್ರಿಯೆ ಇನ್ನೂ ಪೂರ್ಣ ಆಗಿಲ್ಲ. ಅಲ್ಲದೆ, ಅಭ್ಯರ್ಥಿಗಳಿಗೆ ಹುದ್ದೆ ನೀಡುವ ವಿಷಯದಲ್ಲಿ ಈ ಅಧಿವೇಶನದಲ್ಲಿಯೇ ಏನಾದರೂ ಮಾಡಬೇಕು ಎಂದು ತೀರ್ಮಾನಿಸಿದ್ದೆವು. ಮುಖ್ಯಮಂತ್ರಿ ಕೂಡಾ ಈ ಬಗ್ಗೆ ಒಲವು ವ್ಯಕ್ತಪಡಿಸಿದ್ದರು’ ಎಂದೂ ಅವರು ಹೇಳಿದರು.
ಇದನ್ನೂ ಓದಿ... ಕೆಪಿಎಸ್ಸಿ: ಬೊಮ್ಮಾಯಿಗೆ ಸಿದ್ಧಗಂಗಾಶ್ರೀ ಪತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.