ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಬಂದ್ಗೆ ಓಲಾ ಉಬರ್ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿದ್ದರೆ, ಕೆಎಸ್ಆರ್ಟಿಸಿ, ಮೆಟ್ರೊ ಬೆಂಬಲ ನೀಡಿಲ್ಲ. ಹೋಟೆಲ್ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.
ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ತಡೆಯಲು ಯತ್ನಿಸಿದ ಕನ್ನಡಪರ ಹೋರಾಟಗಾರರ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದರು. ಬಸ್ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Karnataka Bandh | ಮೈಸೂರು: ಬಸ್ ತಡೆಯಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ
ಕರ್ನಾಟಕ ಬಂದ್ಗೆ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿಲ್ಲ. ಹೊಸಪೇಟೆ ಸಹಿತ ಇತರೆಡೆ ಜನಜೀವನ ಎಂದಿನಂತೆಯೇ ಸಾಗಿದೆ. ಆಟೊ, ಟ್ಯಾಕ್ಸಿ, ಬಸ್ ಸಂಚಾರ ಸಹ ಮಾಮೂಲಿನಂತೆಯೇ ಇದೆ.
ಕರ್ನಾಟಕ ಬಂದ್ಗೆ ನಗರದಲ್ಲಿ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂದಿನಂತೆ ಜನಜೀವನ ಆರಂಭಗೊಂಡಿದೆ. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ರಾಜ್ಯದ ವಿವಿಧ ಮಾರ್ಗಗಳಿಗೆ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಂದ ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ಗಳ ಹಾಗೂ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಎಂಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಕೆರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜಾಜಿನಗರ ಮೆಟ್ರೊ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಪೂಲೀಸರು ವಶಕ್ಕೆ ಪಡೆದರು.
ಕನ್ನಡಪರ ಸಂಘಟನೆಗಳು ಶನಿವಾರ ನೀಡಿರುವ ಬಂದ್ ಕರೆಗೆ ರಾಮನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ–ಮುಂಗಟ್ಟುಗಳು ಎಂದಿನಂತೆ ತೆರೆದಿವೆ. ಬಸ್, ಆಟೊ ಸೇರಿದಂತೆ ವಾಹನಗಳ ಸಂಚಾರ ಯಥಾಸ್ಥಿತಿಯಲ್ಲಿತ್ತು.
ಬಂದ್ಗೆ ರಾಮನಗರದಲ್ಲಿ ನೀರಸ ಪ್ರತಿಕ್ರಿಯೆ; ಆಟೊ, ಬಸ್ ಸಂಚಾರದಲ್ಲಿಲ್ಲ ವ್ಯತ್ಯಯ
ಕರ್ನಾಟಕ ಬಂದ್ಗೆ ರಾಯಚೂರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಕೇಂದ್ರ ಭಾಗದಲ್ಲಿರುವ ಉಸ್ಮಾನಿಯಾ ಸಗಟು ತರಕಾರಿ ಮಾರುಕಟ್ಟೆ ಬಂದ್ ಮಾಡಲಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿರುವ ಕೆಲ ಅಂಗಡಿಗಳು ಮಾತ್ರ ತೆರೆದುಕೊಂಡಿವೆ. ಪ್ರಾಥಮಿಕ ಶಾಲೆಗಳ ಪರೀಕ್ಷೆಗಳು ಮುಗಿದಿರುವ ಕಾರಣ ಮಕ್ಕಳು ಶಾಲೆಗೆ ಬಂದಿಲ್ಲ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಹನ ಸಂಚಾರಗಳು ಎಂದಿನಂತೆ ಇದ್ದರೆ, ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
Karnataka Bandh | ಚಿಕ್ಕಮಗಳೂರಿನಲ್ಲಿ ಅಂಗಡಿ, ಮುಂಗಟ್ಟು ಬಂದ್: ವಾಹನ ಸಂಚಾರ ಸುಗಮ
ಕರ್ನಾಟಕ ಬಂದ್ ಬೆಂಬಲಿಸಿ ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮನ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಬೇಕು ಎಂದು ಘೋಷಣೆ ಕೂಗಿದರು.
Karnataka Bandh: ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ಪೊಲೀಸ್ ವಶಕ್ಕೆ
ವಿವಿಧ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ಗೆ ಬೀದರ್ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ತೆಲಂಗಾಣ, ಮಹಾರಾಷ್ಟ್ರದ ಸಾರಿಗೆ ಸಂಸ್ಥೆ ಬಸ್ ಗಳು, ಆಟೋ,ಟಂಟಂ ಸೇರಿದಂತೆ ಎಲ್ಲ ರೀತಿಯ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.
ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿದ ಬಂದ್ಗೆ ದಾವಣಗೆರೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಬಸ್ ಸಂಚಾರ ತಡೆಯಲು ಯತ್ನಿಸಿದ ಐವರನ್ನು ಪೊಲೀಸರು ಬಂದಿಸಿದ್ದು, ಹೋರಾಟವು ಪ್ರತಿಭಟನೆಗೆ ಸೀಮಿತಗೊಂಡಿತು.
ಉತ್ತರ ಕರ್ನಾಟಕ ಭಾಗದ ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಕೂತು ಕರ್ನಾಟಕ ಬಂದ್ ಕರೆ ನೀಡಿದ್ದಾರೆ ಎಂದು ಉತ್ತರ ಕರ್ನಾಟಕ ಆಟೊ ಚಾಲಕ ಮಾಲಕರ ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬೆಳಿಗ್ಗೆಯಿಂದಲೂ ಆಟೊ, ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟುಗಳು ನಿರಾತಂಕವಾಗಿ ಸಾಗಿದೆ. ಸರ್ಕಾರಿ, ಖಾಸಗಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳು ಸಹ ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕ್ಯಾಬ್ ಸೇವೆ ಇರಲಾರದು ಎಂದು ಪ್ರಯಾಣಿಕರು ಬೆಳಗ್ಗೆ 11ರ ನಂತರ ಹಾಗೂ ಮಧ್ಯಾಹ್ನ ವಿಮಾನಗಳಿಗೆ ತೆರಳಲು ಬೆಳಗ್ಗೆ 8 ಗಂಟೆಗೆ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರಿಂದ ತುಂಬಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.