ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬೆಳ ಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ಭರಮಗೌಡ (ರಾಜು) ಕಾಗೆ ಅವರು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅನರ್ಹ ಶಾಸಕ ಶ್ರೀಮಂತಗೌಡ ಪಾಟೀಲ ಅವರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ್ದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡರು.
‘ರಾಜು ಕಾಗೆ ಸೇರ್ಪಡೆಯಿಂದ ಬೆಳಗಾವಿ ಭಾಗದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಉಪಚುನಾವಣೆ ನಡೆ ಯುವ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ’ ಎಂದು ದಿನೇಶ್ ಹೇಳಿದರು.
‘ಪಕ್ಷ ಕೊಡುವ ಜವಾಬ್ದಾರಿಯನ್ನು ಭಾಯಿಸುತ್ತೇನೆ’ ಎಂದು ಕಾಗೆ ತಿಳಿಸಿದರು.
ಸ್ಪರ್ಧೆಗೂ ‘ಅನರ್ಹರು’
‘ಅನರ್ಹ ಶಾಸಕರು ಎಂದೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲೂ ಅವರು ಅನರ್ಹರು’ ಎಂದು ಸಿದ್ದರಾಮಯ್ಯ ಕುಟುಕಿದರು.
‘ಅನರ್ಹರು ಎಂದು ಹೇಳಿದ ಮೇಲೆ ಯಾವ ಮುಖ ಹೊತ್ತುಕೊಂಡು ಚುನಾವಣೆಗೆ ಹೋಗುತ್ತಾರೆ. ಚುನಾವಣೆಯಲ್ಲೂ ನಾವು ಅನರ್ಹರು ಎಂದೇ ಜನರಿಂದ ಮತ ಕೇಳಬೇಕಿದೆ’ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.