ಬೆಂಗಳೂರು: ‘ಮುಖ್ಯಮಂತ್ರಿ ಪದವಿ ಕೊಟ್ಟರೂ ಬಿಜೆಪಿಯಲ್ಲಿ ಉಳಿಯುವುದಿಲ್ಲ’ ಎಂದು ಕಾಗವಾಡ ಕ್ಷೇತ್ರದ ಪರಾಜಿತ ಅಭ್ಯರ್ಥಿಭರಮಗೌಡ (ರಾಜು) ಕಾಗೆ ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಕುರಿತು ಸೋಮವಾರ ಬೆಳಿಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದರು. ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆ ಇಲ್ಲ. ಇದು ನನ್ನ ರಾಜಕೀಯ ಭವಿಷ್ಯದ ಪ್ರಶ್ನೆ’ ಎಂದರು.
‘ಈಗ ಮನೆಯಲ್ಲಿ ಕುಳಿತರೆ ಜೀವನ ಪರ್ಯಂತ ಮನೆಯಲ್ಲೇ ಕೂರಬೇಕು. ಯಡಿಯೂರಪ್ಪ ಒಮ್ಮೆ ಮಾತುಕತೆ ಮಾಡಿ, ಈಗ ಸುಮ್ಮನಿರು, ನಿಗಮ– ಮಂಡಳಿಗೆ ನೇಮಕ ಮಾಡುವೆ ಎಂಬುದಾಗಿ ತಿಳಿಸಿದರು. ಅವರ ಮಾತು ಕೇಳಿ ಸುಮ್ಮನಿದ್ದೆ. ಈಗ ಶ್ರೀಮಂತ ಪಾಟೀಲ ಅವರನ್ನು ಗೆಲ್ಲಿಸಿಕೊಂಡು ಬನ್ನಿ ಎನ್ನುತ್ತಿದ್ದಾರೆ. ಆಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ. ಈಗ ಎಲ್ಲವೂ ಮುಗಿದ ಅಧ್ಯಾಯ’ ಎಂದರು.
‘ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಡಿ.ಕೆ.ಶಿವಕುಮಾರ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ್ದೇನೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಬೆಂಬಲ ಕೇಳುತ್ತೇನೆ’ ಕಾಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.