ಬೆಂಗಳೂರು: ವೀರೇಂದ್ರ ಪಾಟೀಲ್ರನ್ನು ಸಿಎಂ ಸ್ಥಾನದಿಂದ ಅವಮಾನಕರ ರೀತಿಯಲ್ಲಿ ಬದಲಾಯಿಸುವ ಮೂಲಕ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ದ್ರೋಹ ಬಗೆದಿತ್ತು. ಲಿಂಗಾಯತ ಸಮುದಾಯದವರಿಗೆ ಸಿಎಂ ಪದವಿಯ ಅವಕಾಶವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ತಪ್ಪಿಸಿದೆ. ಎಂ.ಬಿ. ಪಾಟೀಲ್ ಅವರೇ, ಈ ದ್ರೋಹದ ಇತಿಹಾಸವನ್ನು ಅವಲೋಕಿಸಿ ಎಂದು ಕರ್ನಾಟಕ ಬಿಜೆಪಿ ಹೇಳಿದೆ.
#ವೀರಶೈವಲಿಂಗಾಯತವಿಭಜಕಕಾಂಗ್ರೆಸ್ ಎನ್ನುವ ಹ್ಯಾಷ್ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಗಲು ರಾತ್ರಿ ಎನ್ನದೆ ಜಾತಿ ಜಪ ಮಾಡುವ ಒಬ್ಬ ಮೀರ್ ಸಾದಿಕ್ನ ಮಾತು ಕೇಳಿ ಧರ್ಮವನ್ನೇ ಒಡೆಯುವುದಕ್ಕೆ ಪಣತೊಟ್ಟ ಕುಖ್ಯಾತಿ ಈ ಎಂ.ಬಿ. ಪಾಟೀಲ್ ಅವರದ್ದು. ಪಾಟೀಲರೇ, ರಾಜಕೀಯ ಲಾಭಕ್ಕಾಗಿ ವೀರಶೈವ-ಲಿಂಗಾಯಿತ ಎಂಬ ಮತಭೇದ ಸೃಷ್ಟಿಸಿದ ನೀವೀಗ ಪ್ರವಾದಿಯ ಪೋಷಾಕು ತೊಟ್ಟರೆ ಜನ ನಂಬುತ್ತಾರೆಯೇ? ಎಂದು ಪ್ರಶ್ನಿಸಿದೆ.
ಮತ್ತೊಂದು ಟ್ವೀಟ್ನಲ್ಲಿ, ಸುಳ್ಳು ಹಾಗೂ ಕಪಟಕ್ಕೆ ಮತ್ತೊಂದು ಹೆಸರೇ ಎಂ.ಬಿ. ಪಾಟೀಲರು. ಧರ್ಮ ವಿಭಜನೆಗೆ ಸ್ವಾಮೀಜಿಗಳು ಬೆಂಬಲಿಸಿದ್ದಾರೆ ಎಂಬ ಸುಳ್ಳಿನ ಮೂಲಕ ಸಮಾಜದ ದಾರಿ ತಪ್ಪಿಸಿದ್ದರು. ಯಡಿಯೂರಪ್ಪ ಅವರನ್ನು ಅಗೌರವದಿಂದ ನಡೆಸಿಕೊಂಡಿದ್ದರು. ಈಗ ಮೊಸಳೆ ಕಣ್ಣೀರು ಸುರಿಸುತ್ತಿರುವುದರ ಹಿಂದೆ ರಾಜಕೀಯ ಲಾಭ ಪಡೆಯುವ ದುರುದ್ದೇಶವಿದೆ ಎಂದು ದೂರಿದೆ.
ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ಸ್ಥಾಪನೆ ಸಂದರ್ಭದಲ್ಲಿ ಪ್ರಮುಖ ಮಠಾಧೀಶರು ಹಾಗೂ ಪ್ರಮುಖ ಲಿಂಗಾಯತ ನಾಯಕರಿಗೆ ಎಂ.ಬಿ. ಪಾಟೀಲ ಅವರು ನೀಡಿದ ಅಗೌರವ, ಆಡಿದ ಮಾತುಗಳನ್ನು ಮತ್ತೆ ನೆನಪಿಸಬೇಕೇ? ಉಂಡ ಮನೆಗೆ ಕನ್ನ ಹಾಕುವ ಎಂ.ಬಿ. ಪಾಟೀಲ್ ಅವರಂತವರು ಕ್ಷಮೆಗೆ ಅನರ್ಹರು. ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಕೈ ಹಾಕಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಈ ಹಿಂದೆ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟಿದ್ದರು. ಆದರೆ, ಧರ್ಮ ವಿಭಜಕ ಎಂ.ಬಿ. ಪಾಟೀಲ್ ಅದನ್ನು ಸಮರ್ಥಿಸಿಕೊಳ್ಳುವ ಮೂಲಕ ಜಾತಿ ವಿಭಜಕ ಮೀರ್ ಸಾದಿಕ್ನಿಗೆ ತಾವು ತಕ್ಕ ಶಿಷ್ಯ ಎಂದು ನಿರೂಪಿಸಿಕೊಂಡರು ಎಂದು ಆರೋಪಿಸಿದ್ದಾರೆ.
ನಾನು ಆತ್ಮಸಾಕ್ಷಿಯಾಗಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡಿದ್ದೇನೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ. ಆತ್ಮಸಾಕ್ಷಿ...!? ಹಾಗೆಂದರೇನು ಪಾಟೀಲರೇ? ನೀವು ಸಚಿವರಾಗಿದ್ದಾಗ ಬಿಜೆಪಿಯ ಅತ್ಯುನ್ನತ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಳಸಿದ ಪದಗಳನ್ನು ಒಮ್ಮೆ ನೆನಪಿಸಿಕೊಳ್ಳಿ. ಈಗ ಕಣ್ಣೊರೆಸುವ ತಂತ್ರದ ಹಿಂದಿರುವ ರಾಜಕೀಯ ಕುತಂತ್ರವೇನು!? ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.