
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ಒಟ್ಟು ಹತ್ತು ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು.
ಆ ಮೂಲಕ, ಮಾರ್ಚ್ 6ರಂದು ಮಂಡಿಸಲಿರುವ ತಮ್ಮ ದಾಖಲೆಯ 17ನೇ ಬಜೆಟ್ಗೆ ಅವರು ತಯಾರಿ ಆರಂಭಿಸಿದರು.
ರೇಸ್ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5.30ರವರೆಗೆ 2026-27ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಅರಣ್ಯ ಮತ್ತು ಪರಿಸರ ಇಲಾಖೆ, ಕಾನೂನು ಮತ್ತು ಸಂಸದೀಯ ಇಲಾಖೆ, ಪ್ರವಾಸೋದ್ಯಮ, ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಚಿವರು, ಅಧಿಕಾರಿಗಳ ಜತೆ ಪೂರ್ವಭಾವಿ ಚರ್ಚೆ ನಡೆಸಿದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೂ ಇದ್ದರು.
ಸಭೆಯಲ್ಲಿ ಇಲಾಖಾವಾರು ಹಾಲಿ ಇರುವ ಯೋಜನೆಗಳಿಗೆ ಅಗತ್ಯ ಅನುದಾನ ಮತ್ತು ಹೊಸ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಹೊಸ ಯೋಜನೆಗಳಿಗೆ ಅಗತ್ಯವಿರುವ ಅನುದಾನವೆಷ್ಟು ಎನ್ನುವ ಬಗ್ಗೆಯೂ ಸಮಾಲೋಚನೆ ನಡೆಯಿತು. ಕಳೆದ ಬಜೆಟ್ನಲ್ಲಿ ಘೋಷಿಸಿದ್ದ ಯಾವೆಲ್ಲಾ ಯೋಜನೆಗಳು ಅನುಷ್ಠಾನಗೊಂಡಿವೆ, ಎಷ್ಟು ಬಾಕಿ ಇವೆ ಎಂದು ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡರು.
ವಿವಿಧ ಇಲಾಖೆಗಳ ಜೊತೆ ಶುಕ್ರವಾರವೂ ಮುಖ್ಯಮಂತ್ರಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.