ಬೆಂಗಳೂರು: ‘ರಾಜ್ಯದಲ್ಲಿ ನಡೆದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ- ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವುದು ದಿಗ್ವಿಜಯವಾಗಿ ಕಾಣುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾನು ದಂತಗೋಪುರದಲ್ಲಿ ಕುಳಿತವನಲ್ಲ. ಜನರ ಜೊತೆ ನಿರಂತರ ಒಡನಾಟ ಇಟ್ಟುಕೊಂಡವನು. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ– ಜೆಡಿಎಸ್ನವರು ಅಪಪ್ರಚಾರ ಮಾಡುತ್ಗಿದ್ದರು. ಪ್ರಧಾನಿ ಕೂಡಾ ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಅವೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ’ ಎಂದರು.
‘ಎಲ್ಲಕ್ಕಿಂತಲೂ ಮಿಗಿಲಾಗಿ ಈ ಉಪ ಚುನಾವಣೆ ಫಲಿತಾಂಶ ಬೇರೆಯದೇ ಕಾರಣಕ್ಕೂ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ– ಜೆಡಿಎಸ್ ನಾಯಕರು ಮಾಡುತ್ತಾ ಬಂದಿದ್ದಾರೆ. ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದಾರೆ. ನನ್ನನ್ನು ಕಟ್ಟಿ ಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಆದರೆ, ಬಿಜೆಪಿ– ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಅದಕ್ಕೆ ಚುನಾವಣೆಯ ಫಲಿತಾಂಶವೇ ಸಾಕ್ಷಿ’ ಎಂದರು.
‘ಅಲ್ಲದೆ, ಬಿಜೆಪಿ ಮತ್ತು ಜೆಡಿಎಸ್ನವರು ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ ಜಾತಿ- ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದರು. ರಾಜ್ಯದ ಜಾತ್ಯತೀತ ಮತ್ತು ಶಾಂತಿಪ್ರಿಯ ಮತದಾರರು ಅದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನದ ಮೂಲಕ ಸರ್ಕಾರವನ್ನು ಉರುಳಿಸುವ ಬಿಜೆಪಿ– ಜೆಡಿಎಸ್ನವರ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನೂ ಈ ರಾಜ್ಯದ ಜನರು ಸಹಿಸಿಲ್ಲ ಎನ್ನುವುದನ್ನು ಕೂಡ ಈ ಫಲಿತಾಂಶ ಹೇಳಿದೆ’ ಎಂದೂ ಹೇಳಿದರು.
‘ಶಿಗ್ಗಾವಿ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ನಾವು ಟಿಕೆಟ್ ನೀಡಿದ್ದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ಆದರೆ, ಮತದಾರರು ನಮ್ಮ ಮಾತಿಗೆ ಒಪ್ಪಿಕೊಂಡು ಅಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವೂ ಆಗಿದೆ’ ಎಂದೂ ಪ್ರತಿಪಾದಿಸಿದರು.
‘ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿಯುತ್ತೇನೆ ಎಂದೆಲ್ಲ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದರು. ಆದರೆ, ನಾನು ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ’ ಎಂದ ಮುಖ್ಯಮಂತ್ರಿ, ‘ದೇವೇಗೌಡರು, ಕುಮಾರಸ್ವಾಮಿ, ನಿಖಿಲ್ ಎಲ್ಲರೂ ಅಳುವುದನ್ನು ರೂಢಿ ಮಾಡಿಕೊಂಡಿದ್ದಾರೆ. ಆದರೂ ಜನ ನಮಗೆ ಮತ ಹಾಕಿದ್ದಾರೆ’ ಎಂದೂ ಹೇಳಿದರು.
‘ಉಪ ಚುನಾವಣೆಯ ಫಲಿತಾಂಶ 2028ರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ವಿರೋಧ ಪಕ್ಷಗಳ ಸುಳ್ಳು ಟೀಕೆ ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ. ಭಾವನೆಗಳ ಮೇಲೆ ರಾಜಕಾರಣ ನಡೆಯುವುದಿಲ್ಲ. ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ಜನ ಸಂದೇಶ ನೀಡಿದ್ದಾರೆ’ ಎಂದರು. ‘ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲು ಎಂದು ನಾನು ಹೇಳುವುದಿಲ್ಲ. ಈ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾಗಿದ್ದ ಅವರ ತಂದೆ ಕುಮಾರಸ್ವಾಮಿ ಬಿಟ್ಟು ಹೋದ ಗುರುತಿಗೆ ಜನ ತೀರ್ಪು ನೀಡಿದ್ದಾರೆ. ಅದೇ ರೀತಿ ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸೋಲು ಎಂದು ಹೇಳುವುದಿಲ್ಲ. ಮುಖ್ಯಮಂತ್ರಿಯಾಗಿ ಅವರು ಆ ಕ್ಷೇತ್ರದಲ್ಲಿ ಮಾಡಿರುವ ಕೆಲಸದ ಮೇಲೆ ಮತ ನೀಡಿದ್ದಾರೆ. ಸಂಡೂರಿನಲ್ಲಿ ಮೊದಲಿನಿಂದ ಕಾಂಗ್ರೆಸ್ ಗೆಲ್ಲುತ್ತಾ ಬಂದಿದೆ. ಈ ಮೂರು ಕ್ಷೇತ್ರಗಳಲ್ಲಿ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಜನ ಮತ ನೀಡಿದ್ದಾರೆ’ ಎಂದು ವಿವರಿಸಿದರು.
‘ಮುಡಾ ನಿವೇಶನ ಹಂಚಿಕೆ ವಕ್ಫ್ ಆಸ್ತಿ ವಿಚಾರ ಚನ್ನಪಟ್ಟಣದಲ್ಲಿ ನಾನು ನೀಡಿದ್ದ ಹೇಳಿಕೆಯನ್ನು ವಿವಾದ ಮಾಡಿ ರಾಜಕೀಯ ಲಾಭಕ್ಕೆ ಯತ್ನಿಸಿದವರಿಗೆ ತಕ್ಕ ಶಾಸ್ತಿ ಆಗಿದೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ‘ಅಹಿಂದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ– ಜೆಡಿಎಸ್ ಮಾಡಿದ ಆರೋಪಗಳನ್ನು ರಾಜ್ಯದ ಜನತೆ ಸಹಿಸುವುದಿಲ್ಲ ಎಂಬುದಕ್ಕೆ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಈ ಉಪ ಚುನಾವಣೆಯಲ್ಲೂ ಮುಸ್ಲಿಂ ಸಮುದಾಯ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಕೈ ಹಿಡಿದು ಬಲಪಡಿಸಿದೆ. ಕಾಂಗ್ರೆಸ್ ಸರ್ಕಾರದ ಪರ ವಿಶ್ವಾಸ ತೋರಿಸಿದೆ’ ಎಂದಿದ್ದಾರೆ. ‘ಇನ್ನು ಮುಂದೆಯಾದರೂ ವಿರೋಧ ಪಕ್ಷಗಳು ನಮ್ಮ ಅಭಿವೃದ್ದಿಗೆ ಕೈ ಜೋಡಿಸಲಿ. ನಕಾರಾತ್ಮಕ ರಾಜಕಾರಣವನ್ನು ಕೈಬಿಡಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.