ADVERTISEMENT

ಸಂಪುಟ ವಿಸ್ತರಣೆ: ಅರುಣ್‌ ಸಿಂಗ್‌ ಜತೆ ಗೃಹ ಸಚಿವ ಬೊಮ್ಮಾಯಿ ರಹಸ್ಯ ಚರ್ಚೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 19:31 IST
Last Updated 2 ಜನವರಿ 2021, 19:31 IST
ಶಿವಮೊಗ್ಗಕ್ಕೆ ಶನಿವಾರ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್.
ಶಿವಮೊಗ್ಗಕ್ಕೆ ಶನಿವಾರ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್.   

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಶನಿವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ಮತ್ತೆ ಮನವಿ ಮಾಡಿದ್ದಾರೆ.

ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳು ಮತ್ತು ಪ್ರಮುಖರ ಸಮಿತಿ ಸಭೆಯಲ್ಲಿ ಭಾಗವಹಿಸಲು ರಾಜ್ಯಕ್ಕೆ ಬಂದಿರುವ ಅರುಣ್‌ ಸಿಂಗ್‌ ಅವರನ್ನು ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿ ಮಾಡಿದ ಯಡಿಯೂರಪ್ಪ, ಕೆಲಕಾಲ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆಗಿದ್ದರು.

‘ಉಪ ಚುನಾವಣೆ, ವಿಧಾನ ಪರಿಷತ್‌, ಗ್ರಾಮ ಪಂಚಾಯಿತಿ ಚುನಾವಣೆಗಳು ಮುಗಿದಿವೆ. ಎಲ್ಲ ಚುನಾವಣೆಗಳಲ್ಲೂ ಪಕ್ಷಕ್ಕೆ ಗೆಲುವು ದೊರಕಿದೆ. ಸಂಪುಟ ವಿಸ್ತರಣೆಗೆ ಶಾಸಕರಿಂದ ಒತ್ತಡ ಹೆಚ್ಚುತ್ತಿದೆ. ತಕ್ಷಣವೇ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ವರಿಷ್ಠರ ಮನವೊಲಿಸಿ’ ಎಂಬುದಾಗಿ ಯಡಿಯೂರಪ್ಪ ಅವರು ಸಿಂಗ್‌ ಅವರಿಗೆ ಮನವಿ ಮಾಡಿದರು ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಭರವಸೆ ನೀಡಿದ ಅರುಣ್‌ ಸಿಂಗ್‌, ಆದಷ್ಟು ಬೇಗ ಒಪ್ಪಿಗೆ ದೊರಕಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಎಚ್ಚರಿಕೆಯ ಭರವಸೆ: ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಪಕ್ಷದ ಶಾಸಕರೇ ಮುಖ್ಯಮಂತ್ರಿ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ವಿಚಾರವನ್ನೂ ಅರುಣ್‌ ಸಿಂಗ್‌ ಎದುರು ಪ್ರಸ್ತಾಪಿಸಲಾಗಿದೆ. ಈ ಕುರಿತು ಪದಾಧಿಕಾರಿಗಳ ಸಭೆ ಮತ್ತು ಪ್ರಮುಖರ ಸಮಿತಿ ಸಭೆಯಲ್ಲಿ ಎಚ್ಚರಿಕೆ ನೀಡುವುದಾಗಿ ಸಿಂಗ್‌ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಯಡಿಯೂರಪ್ಪ ಅವರ ಭೇಟಿಗೂ ಮೊದಲು ಬಸವರಾಜ ಬೊಮ್ಮಾಯಿ ಒಬ್ಬರೇ ಸಿಂಗ್‌ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು.

ಬಿಜೆಪಿಯ ಇತರ ಶಾಸಕರು, ಮುಖಂಡರೂ ಭೇಟಿಗೆ ಅವಕಾಶ ಕೋರಿದ್ದರು. ಆದರೆ, ಅರುಣ್‌ ಸಿಂಗ್‌ ಯಾರಿಗೂ ಸಮಯಾವಕಾಶ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.