
ಕುಕನೂರು: ‘ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.
ತಾಲ್ಲೂಕಿನ ಭಾನಾಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಚೆಯಂಥ ಹಿರಿಯ ನಾಯಕರು ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ’ ಎಂದರು.
ಮಹೇಶ್ ಟೆಂಗಿನಕಾಯಿ ಬಲೂನ್ ಇದ್ದಂಗೆ: ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಇನ್ನಿಲ್ಲದ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಒಂಥರ ಬಲೂನ್ ಇದ್ದಂತೆ, ಯಾವಾಗ ಗಾಳಿ ಹೋಗುತ್ತದೆ ಎನ್ನುವುದು ಗೊತ್ತಿಲ್ಲ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲದೇ ಅನಾವಶ್ಯಕವಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವೆ ಕಿಡಿಕಾರಿದರು.
ಹಿಂದಿನ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಭ್ರಮನಿರಸಗೊಂಡಿದ್ದರು. ಕೊಟ್ಟ ಮಾತಿನಂತೆ ನಾವು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಿದ್ದೇವೆ. ಇದುವರೆಗೂ 26 ತಿಂಗಳ ಕಂತು ಬಿಡುಗಡೆಯಾಗಿದ್ದು, ಮನೆ ಮನೆಗೆ ನಮ್ಮ ಯೋಜನೆಗಳು ತಲುಪುತ್ತಿವೆ. ಕಳೆದ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆಯವರು ಆದಷ್ಟು ಬೇಗನೆ ಇಷ್ಟರಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.