ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳನ್ನು ಮೂರು ತಿಂಗಳಲ್ಲಿ ಈಡೇರಿಸುವುದಾಗಿ ನೀಡಿದ್ದ ಆಶ್ವಾಸನೆಯನ್ನು ಕೂಡಲೇ ಕಾರ್ಯಗತಗೊಳಿಸಬೇಕು’ ಎಂದು ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ ಮನವಿ ಮಾಡಿಕೊಂಡಿದೆ.
‘ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರು, ಮುಷ್ಕರ ನಿರತ ಮಹಾನಗರ ಪಾಲಿಕೆಗಳ ನೌಕರರನ್ನು ಕಳೆದ ಜುಲೈ 15ರಂದು ಭೇಟಿ ಮಾಡಿ, ಇಲಾಖೆಯ ಕಾರ್ಯದರ್ಶಿಯವರೊಂದಿಗೆ ಸಂಧಾನ ಸಭೆ ನಡೆಸಿದ್ದರು. ಎಲ್ಲ ಬೇಡಿಕೆಗಳನ್ನು ಮೂರು ತಿಂಗಳಲ್ಲಿ ಈಡೇರಿಸುವ ಭರವಸೆ ನೀಡಿದ್ದರು. ಆರು ತಿಂಗಳಾದರೂ ಇನ್ನೂ ಯಾವುದೇ ಕ್ರಮವಾಗಿಲ್ಲ’ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.
ಸಾಮಾನ್ಯ ನೇಮಕಾತಿ ನಿಯಮಗಳಿಗೆ ತಿದ್ದುಪಡಿ, ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ (ಕೆಜಿಐಡಿ), ಸಮೂಹ ವಿಮೆ ಯೋಜನೆ (ಜಿಐಎಸ್) ಮತ್ತು ಸಮೂಹ ಭವಿಷ್ಯ ನಿಧಿ (ಜಿಪಿಎಫ್) ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿ ಮಹಾನಗರ ಪಾಲಿಕೆಗಳ ನೌಕರರು 2025ರ ಜುಲೈ 8ರಿಂದ ಮುಷ್ಕರ ನಡೆಸಿದ್ದರು.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಅವರು, ‘ನಗರಾಭಿವೃದ್ಧಿ ಸಚಿವರು ಹಾಗೂ ನೀವು ನೀಡಿದ್ದ ಆಶ್ವಾಸನೆಯಿಂದ ಮುಷ್ಕರವನ್ನು ವಾಪಸ್ ಪಡೆಯಲಾಗಿತ್ತು. ಆದರೆ ಈವರೆಗೂ ವೃಂದ ಮತ್ತು ನೇಮಕಾತಿ ನಿಯಮಾವಳಿ ತಿದ್ದುಪಡಿ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರಿ ಆದೇಶವಾಗಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.