ADVERTISEMENT

ಸಂಪುಟ ವಿಸ್ತರಣೆ: ಎರಡು ದಿನದಲ್ಲಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ ಎಂದ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 15 ಮೇ 2022, 18:50 IST
Last Updated 15 ಮೇ 2022, 18:50 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು/ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಸಂಬಂಧ ಯಾವುದೇ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಸಚಿವ ಸಂಪುಟ ವಿಸ್ತರಣೆ ಸಂಬಂಧ ಇನ್ನೆರಡು ದಿನಗಳಲ್ಲಿ ಪಕ್ಷದ ವರಿಷ್ಠರನ್ನು ಸಂಪರ್ಕಿಸುತ್ತೇನೆ’ ಎಂದು ಹುಬ್ಬಳ್ಳಿಯಲ್ಲಿ ಭಾನುವಾರ ಹೇಳಿದ್ದಾರೆ.

ಸಂಪುಟ ವಿಸ್ತರಣೆಯ ಸ್ಪಷ್ಟ ಸುಳಿವು ಇದಾಗಿದೆ ಎಂಬ ಚರ್ಚೆಬಿಜೆಪಿಯಲ್ಲಿ ಆರಂಭವಾಗಿದೆ. ಅಲ್ಲದೇ, ತ್ರಿಪುರಾದಲ್ಲಿ ಏಕಾಏಕಿ ಮುಖ್ಯಮಂತ್ರಿ ಬದಲಾವಣೆ ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಮಾತುಗಳೂ ಪಕ್ಷದ ವಲಯದಲ್ಲಿ ಕೇಳಿ ಬಂದಿದೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ‘ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಸೂಚನೆಗಳನ್ನು ಪಾಲಿಸಲಾಗುವುದು. ರಾಜ್ಯಸಭೆ ಮತ್ತು ವಿಧಾನಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ಪ್ರಮುಖ ಸಮಿತಿ ಸಭೆ ನಡೆಸಿದ್ದನ್ನೂ ವರಿಷ್ಠರು ಗಮನಿಸಿದ್ದಾರೆ’ ಎಂದರು.

ADVERTISEMENT

‘ಬಿ.ವೈ.ವಿಜಯೇಂದ್ರ ಸಂಪುಟ ಸೇರ್ಪಡೆ ವಿಷಯ ವರಿಷ್ಠರಿಗೆ ಬಿಟ್ಟಿದ್ದು’ ಎಂದು ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಸಂಪುಟ ವಿಸ್ತರಣೆ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಜತೆಗೂ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಕಷ್ಟ ತರಬಲ್ಲ ವಿಸ್ತರಣೆ: ಖಾಲಿ ಇರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡುವ ಕಸರತ್ತು ಪಕ್ಷದಲ್ಲಿ ಭಾರಿ ತಲ್ಲಣ ಸೃಷ್ಟಿಸುವ ಸಾಧ್ಯತೆಯೂ ಇದೆ. ಸಚಿವ ಸ್ಥಾನಕ್ಕೆ ದೊಡ್ಡ ದಂಡೇ ಸಿದ್ಧವಾಗಿ ನಿಂತಿದೆ. ಯಾರೋ ಒಬ್ಬರಿಗೆ ಕೊಟ್ಟು ಬೇರೆಯವರಿಗೆ ಬಿಟ್ಟರೆ ಅಸಮಾಧಾನ ಭುಗಿಲೇಳುವುದು ಖಚಿತ ಎಂಬ ಚರ್ಚೆಯೂ ಪಕ್ಷದ ವಲಯದಲ್ಲಿ ನಡೆದಿದೆ.

ವಿಸ್ತರಣೆ ಬದಲಿಗೆ ಸಂಪುಟ ಪುನರ್‌ ರಚನೆ ಕಸರತ್ತಿಗೆ ಕೈ ಹಾಕಿದರೆ, ಕೆಲವು ಸಚಿವರನ್ನು ಕೈಬಿಟ್ಟು ಹೆಚ್ಚು ಶಾಸಕರಿಗೆ ಅವಕಾಶ ನೀಡಬಹುದು. ಇದರಿಂದ ದೊಡ್ಡ ಮಟ್ಟದ ಪ್ರತಿರೋಧವನ್ನು ತಣಿಸಲು ಸಾಧ್ಯ. ವರಿಷ್ಠರು ಈ ಎಲ್ಲವನ್ನು ಅಳೆದು ತೂಗಿ ಸೂಚನೆಗಳನ್ನು ನೀಡಬಹುದು ಎಂದು ಮೂಲಗಳು ಹೇಳಿವೆ.

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಸಚಿವ ಸ್ಥಾನವನ್ನು ಭರ್ತಿ ಮಾಡಲಾಗುತ್ತದೆ. ಗುಜರಾತ್‌, ಉತ್ತರಾಖಂಡ ರಾಜ್ಯಗಳಲ್ಲಿ ಮಾಡಿದ ಬದಲಾವಣೆ ರೀತಿಯಲ್ಲೇ ಎರಡು ಪೈಕಿ ಒಂದು ಮಾದರಿಯನ್ನು ಅನುಸರಿಸುವ ಸಾಧ್ಯತೆ ಇದೆ.

ವಿಜಯೇಂದ್ರ ಆಯ್ಕೆ ಸಾಧ್ಯತೆ ಹಿಂದಿನ ಗುಟ್ಟೇನು?

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆದ ಉಪಚುನಾವಣೆಗಳಲ್ಲಿ ಹಳೆ ಮೈಸೂರು ಭಾಗದ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದ ಕಾರಣಕ್ಕಾಗಿ ಬಿ.ವೈ. ವಿಜಯೇಂದ್ರ ಅವರನ್ನು ಪರಿಷತ್‌ಗೆ ಆಯ್ಕೆ ಮಾಡಲುವರಿಷ್ಠರು ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಸಂಪುಟ ವಿಸ್ತರಣೆ ಮಾಡಿದರೆ ಸಚಿವ ಸ್ಥಾನ ಕಲ್ಪಿಸುವ ಸಾಧ್ಯತೆಯೂ ಇದೆ. ಈ ಮೂಲಕ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಚುನಾವಣೆ ಉಸ್ತುವಾರಿ ನೀಡಿ, ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರುವ ಗುರಿ ನಿಗದಿ ಮಾಡಬಹುದು. ಇದರ ಮೇಲೆ ವಿಜಯೇಂದ್ರ ಅವರ ಮುಂದಿನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ವಿಜಯೇಂದ್ರ ಸಚಿವರಾದರೆ ಮಾತ್ರ ಯಡಿಯೂರಪ್ಪ ಮುಂದಿನ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬಹುದು ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.