ಬೆಂಗಳೂರು: ಮತದಾರರ ಮಾಹಿತಿ ಸಂಗ್ರಹದಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಮುಖ್ಯಮಂತ್ರಿ
ತಳ್ಳಿ ಹಾಕಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹವಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ಕಾಂಗ್ರೆಸ್ಸಿಗರ ವೈಚಾರಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದರು.
‘ಮತದಾರರ ಮಾಹಿತಿಯನ್ನು ಎನ್ಜಿಒಗಳು ದುರ್ಬಳಕೆ ಮಾಡಿದ್ದಲ್ಲಿ ಅದರ ಸಮಗ್ರ ತನಿಖೆಗೆ ಆದೇಶಿಸುತ್ತೇನೆ’ ಎಂದು ಹೇಳಿದರು.
ಕಾಂಗ್ರೆಸ್ ಆರೋಪವೇನು?
ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದಿರುವ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ನೀಡಿರುವ ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ. ಆದರೆ, ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಚಿವರ ಆಪ್ತನಾಗಿರುವುದನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದೆ ಎಂದು ಕಾಂಗ್ರೆಸ್ ದೂರಿದೆ.
ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉಚಿತವಾಗಿ ಮಾಡುತ್ತೇವೆ ಎಂದು ಚಿಲುಮೆ ಸಂಸ್ಥೆ ಹೇಳಿಕೊಂಡಿದೆ. ಆದರೆ ಆ ಕಾರ್ಯಕ್ರಮಕ್ಕೆ ದಿನಕ್ಕೆ ₹1,500 ವೇತನ ನೀಡಿ ಬಿಜೆಪಿ ಕಾರ್ಯಕರ್ತರನ್ನೇ ಬೂತ್ ಲೆವೆಲ್ ಆಫೀಸರ್ಗಳೆಂದು ನೇಮಿಸುತ್ತಿದೆ. ಉಚಿತವಾಗಿ ಕೆಲಸ ಮಾಡುವವರಿಗೆ ದುಬಾರಿ ವೇತನ ನೀಡುತ್ತಾರೆಂದರೆ ಅವರ ‘ಲಾಭಾಂಶ’ ಯಾವುದು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.